Thursday, December 01, 2011

ಬೆಳಕು ಕಂಡ ಆ ಕ್ಷಣದಲಿ...

ಮಾತು ನಿಂತಿದೆ,
ಮೌನ ಬೇಕಿದೆ,
ಮನಸ್ಸು ಬರಿದಾಗಿದೆ...
ದಾರಿ ಕಾಣದಾಗಿದೆ...

ಎಣ್ಣೆಯೂ ಮುಗಿದಿದೆ,
ದೀಪವೂ ಆರಿದೆ,
ಕತ್ತಲೆಯೇ ಸುತ್ತಲೂ...
ಬೆಳಕೇ ಕಾಣದಿರಲು...

ನಿಜದಿ ಅಂಧಕಾರವೋ,
ದಿಟ್ಟಿಯೇ ಕಳೆದಿದೆಯೋ,
ನೆರಳೂ ಜೊತೆಗಿಲ್ಲ...
ಸಂಗಾತಿಯ ಸುಳಿವಿಲ್ಲ...

ಕದವು ತೆರೆದೀತೆ...
ಹಣತೆ ಹೊತ್ತೀತೆ...
ಬದುಕಿದರೆ ಬಂದೇನು...
ಬರೆದಾರೆ ಬರೆದೇನು...
ಬೆಳಕು ಕಂಡ ಆ ಕ್ಷಣದಲಿ...

Wednesday, February 03, 2010

ಕಲಾಲೋಕದಲ್ಲಿ ಕಳೆದ ಕಾಲ...

"ಯಾರ್ರೀ ಶಿವಾನಂದ (?!) ಇಲ್ಲೇ ಇಳೀರಿ, ಮುಂದಕ್ಕೆ ಹೋಗಲ್ಲ, ಬ್ಲಾಕ್ ಮಾಡಿದಾರೆ" ಕಂಡಕ್ಟರ್ ಕೂಗಿದಾಗ ದಡಬಡನೆ ಇಳಿದೆ! ರಸ್ತೆ ದಾಟುತ್ತಿದ್ದಂತೆಯೇ ಕಾಣುತ್ತಿತ್ತು "ಸಂತೆ". ಥೇಟ್ ನಮ್ಮೂರಿನ ಸೋಮವಾರದ ಸಂತೆಯನ್ನೇ ಹೋಲುವಂತದ್ದು! ಆದರಲ್ಲಿದ್ದುದು ಹೊಟ್ಟೆಯ ಹಸಿವನ್ನಿಂಗಿಸುವ ಹಣ್ಣು-ತರಕಾರಿಗಳ ಸಂತೆಯಲ್ಲ, ಕಣ್ಣಿನ ದಾಹ ತಣಿಸುವ, ಮನಸ್ಸನ್ನು ಅರಳಿಸುವ "ಚಿತ್ರ ಸಂತೆ".

ಈ ರಾಜಕಾರಣಿಗಳು ಈ ತರಹದ ಸಮಾರಂಭಗಳಿಗೆ ಏತಕ್ಕಾದರೂ ಬರುತ್ತಾರೋ ತಿಳಿಯೆ! ಆ ಟೋಪಿ ಸಚಿವರಿಗೆ ತಾವೆಲ್ಲಿ ಮಾತನಾಡುತ್ತಿದ್ದೇವೆ ಎಂಬುದರ ಅರಿವಾದರೂ ಇತ್ತೋ ನಾಕಾಣೆ . ಆ ಮಹಾಸಾಮ್ರಾಟರ ಹೆಸರಿನ ಸಚಿವರು ಕಲಾಕೃತಿಗಳನ್ನು ವೀಕ್ಷಿಸುವಾಗ ಯಾವುದೋ ಕೇಸಿನ ವಿಚಾರದ ಚರ್ಚೆಯಲ್ಲಿ ತಲ್ಲೀನರಾಗಿದ್ದರು. ಆದರೂ ಈ ಪುಡಾರಿಗಳ ಬೆಂಬಲವಿಲ್ಲದೆ ಇಂತಹ ಕಾರ್ಯಕ್ರಮಗಳು ನಡೆಯುವುದು ಅಸಾಧ್ಯವಾಗಿರುವುದು ನಮ್ಮ ಪುಣ್ಯಫಲ! ಇವೆಲ್ಲದರ ನಡುವೆಯೂ ಯಾರೋ ಪುಣ್ಯಾತ್ಮರು ಮಹಾನ್ ಕಲಾವಿದ ರೋರಿಕ್ ರವರನ್ನು ನೆನಪಿಸಿಬಿಟ್ಟರು! ಅಂತಹ ಭಾರೀ ಜನಜಂಗುಳಿಯನ್ನೂ ಭೇದಿಸಿ ನೆನಪು ವಿಶಾಲವಾದ ಬಾಲ್ಯದಂಗಳದಲ್ಲಿ ನಿಲ್ಲಿಸಿಬಿಟ್ಟಿತ್ತು!

ಇನ್ನೂ ಪ್ರಾಥಮಿಕ ತರಗತಿಯಲ್ಲಿದ್ದೆ. "ಸುಧಾ" ವಾರಪತ್ರಿಕೆಯಲ್ಲಿ ಕಲಾವಿದ ರೋರಿಕ್ ಕುರಿತಾದ ಮುಖಪುಟ ಲೇಖನ ಬಂದಿತ್ತು. ಮುಖಪುಟದ ಮೂಲೆಯಲ್ಲಿ ರೋರಿಕರ ಪಾಸ್ಪೋರ್ಟ್ ಸೈಜಿನ ಪೋಟೊ, ಉಳಿದ ಪುಟದಲ್ಲಿ ಅವರ ಕಲಾಕೃತಿ. ಕೆಂಪು ಸೀರೆಯಂತಹ ಬಟ್ಟೆ ತೊಟ್ಟ ನೀರೆ, ಕೊಳದ ಬಳಿ, ಬೆನ್ನು ತೋರಿಸಿ, ತಿರುಗಲೋ ಬೇಡವೋ ಎಂಬಂತೆ ಮುಖ ತಿರುಗಿಸಿ ಒಂದು ಕೋನದಲ್ಲಿ ನಿಂತಿದ್ದಾಳೆ. ಸುತ್ತಲ ಸುಂದರ ವನಸಿರಿಯ ನಡುವೆ ನಿಂತಿರುವ ಈ ನೀರೆ, ಸೌಂದರ್ಯ ನನ್ನದೋ, ಪ್ರಕೃತಿಯದೋ ಎನ್ನುವಂತೆ ಪ್ರಶ್ನಿಸುತ್ತಿದ್ದಾಳೆ. ಹೀಗೆ ತಮ್ಮ ಚಿತ್ರದಲ್ಲಿಯೇ ಸೌಂದರ್ಯದ ಪೈಪೋಟಿಯನ್ನು ಚಿತ್ರಿಸಿದ್ದ ಕಲಾವಿದನಿಗೆ ಮರುಳಾಗಿದ್ದೆ! ಸ್ವಲ್ಪ ಹಳತಾದ ಮೇಲೆ, "ಸುಧಾ" ಮುಖಪುಟವನ್ನು ಕಿತ್ತು, ಅಪ್ಪ ಕೊಡಿಸಿದ್ದ ಹೊಸ "ಡ್ರಾಯಿಂಗ್ ಬುಕ್" ಗೆ ಬೈಂಡ್ ಹಾಕಿಕೊಂಡಿದ್ದೆ. ಅಷ್ಟಕ್ಕೇ ಜೂನಿಯರ್ ರೋರಿಕ್ ಆದಷ್ಟು ನಲಿವಿನಿಂದ ಕುಣಿದಾಡಿತ್ತು ಆ ಹುಚ್ಚು ಮನಸ್ಸು!!

ಅದೇ ಗುಂಗಿನಲ್ಲಿ ಕಪ್ಪು ಬಿಳುಪು ಚಿತ್ರಗಳನ್ನು ದಾಟಿ ಮುಂದೆ ಬಂದಿದ್ದೆ. ಮತ್ಯಾವುದೋ ಸುಂದರಿ ಕಾಯುತ್ತಿದ್ದಳು ನನಗಾಗಿ! ಆಕೆಯ ಕಂಗಳು ನನ್ನನ್ನೇ ಕರೆಯುತ್ತಿರುವಂತೆ ಭಾಸವಾಯಿತು! ಅತ್ಯಂತ ಹೊಸತು, ವಿಶೇಷ ಎನಿಸುವಂತಹ ಪ್ರಯೋಗವೇನಾಗಿರಲಿಲ್ಲವದು. ಆದರೂ ಏನೋ ಸೆಳವಿತ್ತು ಆ ಸರಳತೆಯಲ್ಲಿ. ಆ ಕಲಾವಿದಳಿಗೆ ಅಭಿನಂದನೆಗಳನ್ನು ಸಲ್ಲಿಸಿ ಮುಂದೆ ಸಾಗಿದೆ. ಮತ್ತೊಂದಿಷ್ಟು ಚಿತ್ರಗಳು. ಜಲವರ್ಣ, ತೈಲವರ್ಣಗಳು, ಬಿಳಿಯ ಹಾಳೆಯ ಮೇಲೆ, ಡ್ರಾಯಿಂಗ್ ಶೀಟಿನ ಮೇಲೆ, ತೆಳು ಬಟ್ಟೆಯ ಮೇಲೆ, ದೊಡ್ಡ ಕ್ಯಾನವಾಸಿನ ಮೇಲೆ... ಬಗೆ ಬಗೆಯ ಬಣ್ಣಗಳು, ಪ್ರಕೃತಿಯ ವಿವಿಧ ಮೂಡ್ ಗಳು, ಚಂದ್ರನ ಹಲವು ಮುಖಗಳು, ಏಳುವ/ಮುಳುಗುವ ಸೂರ್ಯನ ಚಿತ್ರಗಳು.. ಇಲ್ಲೆಲ್ಲೋ ಕಲಾವಿದನ ಕಲ್ಪನೆಗಿಂತ ನಿಸರ್ಗದ ಸ್ನಿಗ್ಧ ಸೌಂದರ್ಯವೇ ಮೇಲುಗೈ ಸಾಧಿಸಿದೆಯೇನೋ ಎಂದೆನ್ನಿಸಿದರೂ, ಆ ಸೌಂದರ್ಯವನ್ನು ಕುಂಚದಲ್ಲಿ ಸೆರೆಹಿಡಿದು, ಪ್ರಕೃತಿಯ ಪ್ರತಿಕೃತಿ ಸೃಷ್ಟಿಸಿದ ಕಲಾವಿದನ ಕಲಾಪ್ರೌಢಿಮೆಗೆ ಹ್ಯಾಟ್ಸ್ ಆಫ್!!

ಸತತ ನಾಲ್ಕೈದು ಸ್ಟಾಲುಗಳಲ್ಲಿ ಇಂತವೇ ಚಿತ್ರಗಳು ಏಕತಾನತೆಯನ್ನು ತಂದಿರಲು, ಖಾದಿಭಂಡಾರದ ಬಳಿ ಹೊಸಬಗೆಯ ಚಿತ್ರಗಳು ಕಂಡುಬಂದವು. ಅವುಗಳ ಪ್ರಾಕಾರ ತಿಳಿದಿಲ್ಲವಾದರೂ, ಅದರಲ್ಲಿನ ವಿಷಯ ಪ್ರಸ್ತುತಿ ಮನ:ಸೆಳೆಯಿತು. ಅರ್ಥೈಸಲು ಪ್ರಯತ್ನಿಸುತ್ತಿದ್ದಾಗ, ಹಿಂದಿನಿಂದ ಯಾರೋ ಕಲಾಪ್ರೇಮಿಗಳು ಹೇಳಿದರು, "ಇದು ನನಗೆ ತುಂಬಾ ಇಷ್ಟವಾದ ಪೇಂಟಿಂಗು. ಆದ್ರೆ ಅದೇನು ಅಂತ ಅರ್ಥ ಆಗ್ಲಿಲ್ಲ ಅಷ್ಟೆ!" ಆ ಮಾತುಗಳ "ಅರ್ಥ" ಅರ್ಥವಾಯಿತೇ ಹೊರತು, ಅದರಲ್ಲಿನ "ಭಾವ" ಅರ್ಥವಾಗಲಿಲ್ಲ. ಆದರೂ ಹಿನ್ನೆಲೆಯಲ್ಲಿ ಅನೇಕ ಪ್ರಶ್ನೆಗಳೆದ್ದವು. ಕಲಾಕೃತಿಯೊಂದನ್ನು ಎಂದಿಗಾದರೂ ಅರ್ಥಮಾಡಿಕೊಳ್ಳುವ ಅನಿವಾರ್ಯತೆಯಿದೆಯೇ? ಅದು ಅರ್ಥವಾಗದೆಯೇ ಇಷ್ಟವಾಗಲು ಸಾಧ್ಯವೇ? ಸಾಧ್ಯವಿಲ್ಲವೇ? ಅರ್ಥವಾದರೂ ಕಲಾಕಾರನ ದೃಷ್ಟಿಯಲ್ಲೇ ಅರಿತುಕೊಳ್ಳಬಲ್ಲೆವೇ? ಅರ್ಥೈಸುವಿಕೆ ನಮ್ಮ ತಿಳುವಳಿಕೆ, ಆಸಕ್ತಿಯ ಹಿನ್ನೆಲೆಯಲ್ಲಿ ಮಾತ್ರವೇ ಅಲ್ಲವೇ? ಆದರೂ, ಕಲಾಕಾರ ಕಲಾಕೃತಿಯನ್ನು ರಚಿಸಿದ ಹಿನ್ನೆಲೆ, ಪರಿಕಲ್ಪನೆಗೆ ಆದಷ್ಟೂ ಹತ್ತಿರ ಹೋದಾಗಲೇ ಅದರ ಸೌಂದರ್ಯವನ್ನು ಗರಿಷ್ಟ ಮಟ್ಟದಲ್ಲಿ ಆಸ್ವಾದಿಸಲು ಸಾಧ್ಯವಲ್ಲವೇ?..............

ಅದೇ ಗುಂಗಿನಲ್ಲಿ ಮುಂದೆ ಸಾಗುತ್ತಿದ್ದಾಗ ಮತ್ತೊಂದು ವಿಸ್ಮಯ ಕಾದಿತ್ತು! ಡಿಜಿಟಲ್ ತಂತ್ರಜ್ಞಾನ, ಫೋಟೋಗ್ರಫಿ ಎನ್ನುವುದು ಬಂದಮೇಲೆ, ನಿಸರ್ಗದ ಸೌಂದರ್ಯವನ್ನೂ, ಐತಿಹಾಸಿಕ ಸ್ಮಾರಕಗಳನ್ನು ಫೋಟೋದಲ್ಲಿ ಹಿಡಿದಷ್ಟು ಸ್ಪಷ್ಟವಾಗಿ ಪೇಂಟಿಂಗ್ ನಲ್ಲಿ ಹಿಡಿಯುವುದು ಸಾಧ್ಯವಿಲ್ಲವೆನ್ನುವುದು ನನ್ನ ಅನಿಸಿಕೆಯಾಗಿತ್ತು. ಆದರೆ ಆ ಶಿಲ್ಪಕಲೆಯ ಚಿತ್ರಕಲೆಯನ್ನು ನೋಡಿದ ಕ್ಷಣ ಅಭಿಪ್ರಾಯ ಬುಡಮೇಲಾಯಿತು! ಬೇಲೂರು, ಹಳೆಬೀಡುಗಳಲ್ಲಿ ಕಲ್ಲನ್ನು ಕೆತ್ತಿ ಕಲೆಯಾಗಿಸಿದ ಶಿಲ್ಪಿಗಳಷ್ಟೇ ಅದ್ಭುತವಾಗಿ ಕುಂಚದಲ್ಲಿ ಮರುಸೃಷ್ಟಿಸಿದ ಆ ಕಲಾವಿದನ ಕಲಾನೈಪುಣ್ಯತೆಗೊಂದು ಸಲಾಮ್!!

ದೇವರ ಕುರಿತಾದ ನಮ್ಮ ನಂಬಿಕೆಗಳೇನೇ ಇರಲಿ, ಈ ಕಲಾವಿದರಿಗೆ ಮಾತ್ರ ಇವರೆಂದಿಗೂ ಸ್ಪೂರ್ತಿಯ ಸೆಲೆಯೇನೋ! ಮುಕ್ಕೋಟಿ ದೇವರುಗಳಿದ್ದರೂ, ಗಣೇಶ ಮತ್ತು ಕೃಷ್ಣ ಇವರ Hot favourite ಗಳೇನೋ! ಅದೆಷ್ಟು ತರಾವರಿಯ ಗಣಪನ ಚಿತ್ರಗಳು! ಕೃಷ್ಣನ ವಿಧಗಳೇ ವಿಧಗಳು - ಬಾಲಕೃಷ್ಣ, ತುಂಟಕೃಷ್ಣ, ಬೆಣ್ಣೆಕೃಷ್ಣ, ಗೋವರ್ಧನಧಾರಿ, ಗೋಪಿಕಾಲೋಲ, ರಾಧಾಕೃಷ್ಣ, ಮೀರಾಕೃಷ್ಣ... ಎಣೆಯುಂಟೇ ಈತನ ಅವತಾರಗಳಿಗೆ! ದೇವತೆಗಳಲ್ಲಿ ಸರಸ್ವತಿಯ ಬಾಹುಳ್ಯವಿದ್ದರೆ, ದಂಪತಿಗಳ ಗುಂಪಿನಲ್ಲಿ ಉಮಾಮಹೇಶ್ವರರು ಜನಪ್ರಿಯರಂತೆ ಕಂಡರು. ವನ್ಯಪ್ರಾಣಿಗಳ ಚಿತ್ರಗಳಲ್ಲಿ, ಭಾರತದ ಹುಲಿ, ಆಫ್ರಿಕಾದ ಆನೆಗಳದ್ದೇ ಕಾರುಬಾರು. ವ್ಯಂಗ್ಯ ಚಿತ್ರಗಳು ನಗೆಯ ಅಲೆಯನ್ನೇ ಎಬ್ಬಿಸಿದರೆ, ಸಾಂಪ್ರದಾಯಿಕ ಚಿತ್ರಗಳು ಮೈಸೂರು, ತಂಜಾವೂರು ಕಲಾವೈಭವವನ್ನು ಮತ್ತೆ ಮೆರೆಯಿಸಿದವು. ಕೆಂಪು ಕಚ್ಚೆಸೀರೆಯುಟ್ಟು ಹಂಸದ ಬಳಿನಿಂತಿರುವ ಅಪ್ಪಟ ಭಾರತೀಯ ನೀರೆಯ ಚಿತ್ರವಂತೂ ಅದೆಷ್ಟು ಕಲಾವಿದರ ಕುಂಚದಲ್ಲಿ ಕುಣಿದಾಡಿದೆಯೋ! (ಮೂಲ ಚಿತ್ರ ರೋರಿಕರದ್ದೇ?)

ಆ Art gallery ಯ ಒಳಗೆ ಅಷ್ಟೆಲ್ಲ ಸಾಂಪ್ರದಾಯಿಕ ಚಿತ್ರಕಲೆಗಳ ನಡುವೆ ಇತ್ತೊಂದು ವಿಶೇಷ ಅನಿಸುವಂತಹ ಚಿತ್ರ. ಅದನ್ನ Modern Art ಅಂತಾರೋ ಗೊತ್ತಿಲ್ಲ, ಏಕೋ ಈ ನಡುವೆ ಮನಸ್ಸು "ಅತಿ"ಯಾದ ಬಣ್ಣಗಳನ್ನ ವಿರೋಧಿಸುತ್ತದೆ. ಅನೇಕರು "ಡಲ್" ಎಂದೆನ್ನುವ ಪೇಸ್ಟಲ್ ಬಣ್ಣಗಳನ್ನೇ ಬಯಸುತ್ತದೆ. ಇಂತಹ ಬಣ್ಣಗಳನ್ನು ಬಳಸಿ ಅಥವಾ ಕೇವಲ ಕಪ್ಪು ಬಿಳುಪಿನಲ್ಲೇ ಹೊಸತೇನನ್ನಾದರೂ ಹೇಳುವಂತಿರುವ ಕಲಾಕೃತಿಗಳಿಗಾಗಿ ಹುಡುಕುತ್ತಿರುತ್ತದೆ. ಬಹುಶ: ಇವೆಲ್ಲವೂ ಅದರಲ್ಲಿತ್ತು ಅನಿಸಿದ್ದಕ್ಕಾಗಿಯೋ ಏನೋ, ಆ ಚಿತ್ರ ಎಳೆದು ನಿಲ್ಲಿಸಿಕೊಂಡುಬಿಟ್ಟಿತ್ತು! ಅಲ್ಲಿ ಫೋಟೋ ತೆಗೆಯುವಂತಿರಲಿಲ್ಲವಾದ್ದರಿಂದ, ಕಣ್ಣಿನಲ್ಲಿಯೇ ಕ್ಲಿಕ್ ಮಾಡಿ ಮೆದುಳಿನಲ್ಲಿ ಸಂಗ್ರಹಿಸಿಕೊಂಡು ಹಿಂತಿರುಗಿದ್ದಾಯಿತು. ನಾರಾಯಣ್ ರವರ Jockey ಮತ್ತು ಉತ್ತರಕರ್ನಾಟಕದ ಗ್ರಾಮ್ಯ ಚಿತ್ರಗಳು ಗಮನ ಸೆಳೆದವು. ನಿಜಕ್ಕೂ ನಾನು ಕಳೆದುಹೋಗಿದ್ದು, ರಮೇಶ್ ತೆರ್ದಾಲ್ ರವರ ಚಿತ್ರಗಳನ್ನು ನೋಡುತ್ತಾ. ಹುಚ್ಚು ಮನಸ್ಸಿನ ಹಲವು ಮುಖಗಳು ಅಲ್ಲಿ ಚಿತ್ರಿತವಾಗಿದ್ದವು. "ಶಾಂತಿ" ಎಂದೊಡನೆ ಬಿಳಿಪಾರಿವಾಳ ಅಥವಾ ಬುಧ್ಧನ ಚಿತ್ರಗಳು ಸಾಮಾನ್ಯ. ಇಲ್ಲಿಯೂ ಆ ಬುದ್ಧನ prototype ಬಳಸಿದ್ದರೂ, ಉಳಿದ ಚಿತ್ರಗಳು ಏನೋ ಹೊಸದೆನಿಸಿದವು. ಪ್ರಕೃತಿಯ ನಡುವೆ ಕುಳಿತು ನಿಸರ್ಗವನ್ನು ಚಿತ್ರಿಸಬಹುದು, ಯಾರನ್ನೋ ನೆನೆಯುತ್ತಾ, ಭಾವಚಿತ್ರದೊಳಗೂ ಭಾವನೆಯನ್ನು ತುಂಬಬಹುದು! ಆದರೆ, ಕಣ್ಣಿಗೆ ಕಾಣದ, ಹರಿಬಿಟ್ಟಲ್ಲಿ ಹರಿಯುವ ಈ ಮನಸ್ಸನ್ನು ಚಿತ್ರದಲ್ಲಿ ಹಿಡಿದಿಡುವುದಿದೆಯಲ್ಲ ಅದೇಕೋ ತುಂಬಾ ಕಷ್ಟವೆನಿಸುತ್ತದೆ!!

ಸಹಬ್ಲಾಗಿಗರಾದ ಪಾಲಚಂದ್ರ ಮತ್ತು ಸವಿತ ರವರ ಸ್ಟಾಲ್ ಗೆ ಹೋಗದಿದ್ದರೆ ಚಿತ್ರಸಂತೆ ಮುಗಿಯುವುದಿಲ್ಲ! ಪಾಲರ ಚಿತ್ರಗಳನ್ನು ನೋಡಿಯೇ ಇದ್ದೇವೆ, ಹೇಳಲು ಹೆಚ್ಚೇನೂ ಉಳಿದಿಲ್ಲ! ಸವಿತಾರವರ ವಾರ್ಲಿ ಪೇಂಟಿಂಗ್ ವಿಶಿಷ್ಟವಾಗಿತ್ತು. ಮಹಾರಾಷ್ಟ್ರ, ಗುಜರಾತ್ ಕಡೆಯ ಗ್ರಾಮ್ಯ ಕಲೆಯಿದು. ಉತ್ತರ ಕರ್ನಾಟಕದ ಕಡೆಯಲ್ಲೂ ಕಾಣಬಹುದು. ಭೂಮಿ ಹುಣ್ಣಿವೆ, ಮಣ್ಣೆತ್ತಿನ ಅಮವಾಸ್ಯೆ (??) ಸಮಯದಲ್ಲಿ ಅವ್ವ/ಅತ್ತೆ ಊರ್ಮಂಜ(ಕೆಮ್ಮಣ್ಣು), ಸಗಣಿಯನ್ನು, ಹಂಚು ತೊಳೆದ ನೀರಲ್ಲಿ ಕಲೆಸಿ ಗೋಡೆಗೆ ಬಳಿದು (background) ಸುಣ್ಣವನ್ನು ಗಟ್ಟಿಯಾಗಿ ಕಲೆಸಿ ಅಂಚಿಕಡ್ಡಿಯಲ್ಲಿ ಚಿತ್ರಿಸುತ್ತಿದ್ದ ನೆನಪು.. ಬ್ಲಾಗಿಗರಿಬ್ಬರಿಗೂ ಅಭಿನಂದನೆಗಳು.

ಚಿತ್ರಗಳು ನೋಡಿದಷ್ಟೂ ನೋಡಿಸಿಕೊಳ್ಳಬೇಕು. ಪ್ರತಿಬಾರಿ ನೋಡಿದಾಗಲೂ ಹೊಸದರಂತೆ ಕಾಣಬೇಕು. ಅದೆಷ್ಟೋ ಆಲೋಚನೆಗಳನ್ನು ನಮ್ಮಲ್ಲಿ ಹುಟ್ಟುಹಾಕಬೇಕು. ನೋಡುತ್ತಲೇ ಹಾಗೇ ಕಳೆದುಹೋಗಬೇಕು. ಸಂತೆಯಲ್ಲೊಂದು ಏಕಾಂತತೆಯನ್ನು ಸೃಷ್ಟಿಸಬೇಕು. ಹೀಗೇ ಇನ್ನೇನೋ...! ಇವೆಲ್ಲವನ್ನೂ ಚಿತ್ರಸಂತೆ ನೀಡಿತ್ತು...

Thursday, December 03, 2009

ಅಂಗವಿಕಲರು ವಿಕಲಚೇತನರೇ?

"ಓ ನನ್ನ ಚೇತನ
ಆಗು ನೀ ಅನಿಕೇತನ.."

ಮತ್ತೆ ಮತ್ತೆ ಹಾಡಿಸಿಕೊಳ್ಳುವ, ಎಂತಹ ವೈಫಲ್ಯದ ಪರಿಸ್ಥಿತಿಯಲ್ಲೂ ವ್ಯಕ್ತಿಯನ್ನು ಹುರಿದುಂಬಿಸಬಲ್ಲ, ಹುಲುಮಾನವನಿಂದ ವಿಶ್ವಮಾನವನನ್ನಾಗಿ ರೂಪಿಸಬಲ್ಲ ಅದ್ಭುತವಾದ ಸಾಲುಗಳು! ಆದರೆ ನಮ್ಮ ಆಧುನಿಕ ನುಡಿತಜ್ಞರ ಪ್ರಕಾರ, ಅಂಗವಿಕಲ == ವಿಕಲಚೇತನ (== physically challenged == specially abled). ಆಹಾ! ಎಂತಹ ಭಾಷಾ ಪ್ರಾವೀಣ್ಯತೆ! ನಿಜಕ್ಕೂ ಕುವೆಂಪು ಚೇತನ ಇಂದಿಗೆ ನಿರ್ನಾಮವಾಯಿತು. "ಚೇತನ" ವನ್ನು ನಾಮಪದವಾಗಿ ಬಳಸಿದಾಗ - ಮನಸ್ಸು, ಬುದ್ಧಿ, ಪ್ರಜ್ಞೆ ಎಂತಲೂ, ಗುಣವಾಚಕವಾಗಿ ಬಳಸಿದಾಗ - ಇಂದ್ರಿಯಗ್ರಹಣ ಶಕ್ತಿಯುಳ್ಳ, ಪ್ರಜ್ಞೆಯುಳ್ಳ, ಸಜೀವವಾದ ಎಂಬ ಅರ್ಥವೆಂದು ವೆಂಕಟಸುಬ್ಬಯ್ಯನವರ ಪ್ರಿಸಂ ನಿಘಂಟು ಹೇಳುತ್ತದೆ. ಹೀಗಿರಲು, ಕೆಲವು ಅಂಗಗಳು ಊನವಾಗಿರುವವ ವಿಕಲಚೇತನ!! ಎಷ್ಟು ಅರ್ಥಹೀನ ಹಾಗೂ ಅಮಾನವೀಯ! ಬಹುಶ: ಆ ಭಾಷಾಪರಿಣತರೊಮ್ಮೆ ಅಂತರರಾಷ್ಟ್ರೀಯ ಅಂಗವಿಕಲರ ಒಲಂಪಿಕ್ಸ್ (IWAS - 2009) ಕ್ರೀಡಾಕೂಟವನ್ನೊಮ್ಮೆ ವೀಕ್ಷಿಸಿದ್ದರೆ ಇಂತದೊಂದು ಪದದ ರಚನೆಯೇ ಆಗುತ್ತಿರಲಿಲ್ಲವೇನೋ!

ರಗ್ಬಿ, ಟೇಬಲ್ ಟೆನ್ನಿಸ್, ವಾಲಿಬಾಲ್, ಶಾಟ್ಪುಟ್, ಜಾವ್ಲಿನ್, ಡಿಸ್ಕ್ ಥ್ರೋ, ಆರ್ಚರಿ, ಲಾಂಗ್ ಜಂಪ್, ಹೈಜಂಪ್, ಈಜು, ಅಥ್ಲೆಟಿಕ್ಸ್............ ಕ್ರೀಡೆಗಳ ಪಟ್ಟಿ ಬೆಳೆಯುತ್ತದೆ. ಆಟಗಾರರಿಗಿದ್ದ ಅರ್ಹತೆ, ಕೈಗಳಿಲ್ಲ, ಕಾಲ್ಗಳಿಲ್ಲ, ಬೆರಳುಗಳಿಲ್ಲ, ಸೊಟ್ಟ ಕಾಲುಗಳು, ಸ್ವಾಧೀನವಿಲ್ಲದ ಕೈಗಳು, ಸೊಂಟ.....ಆದರೆ ಅವರಲ್ಲಿದ್ದ ಆ sportsmanship? ಆ ಹೋರಾಡುವ ಛಾತಿ? ಸಾಧಿಸುವ ಛಲ? ಜೀವನೋತ್ಸಾಹ? ಕ್ಷಮಿಸಿ, ಎಲ್ಲ ಸರಿಯಿರುವ ನಮ್ಮಲ್ಲಿಲ್ಲ. ಚಿನ್ನದ ಪದಕವನ್ನು ಪಡೆಯಲು ಚಿಗರೆಯಂತೆ ಜಿಗಿಯುತ್ತಾ ಮೆಟ್ಟಿಲಿಳಿದು ಬರುತ್ತಿದ್ದಾಳೆ ಆ ಚೀನಾದ ಯುವತಿ. ಆಕೆಗೆ ಎರಡೂ ಕಾಲುಗಳಿಲ್ಲ ಎಂದು ಯಾರೂ ಹೇಳಲು ಸಾಧ್ಯವಿಲ್ಲ! ಮಡಿಚಲೇ ಆಗದ ಒಂದು ಕಾಲು, ಸ್ವಾಧೀನವೇ ಇಲ್ಲದ ಒಂದು ಕೈ. ೫ ಸೆಟ್ ಗಳ ತನಕ ನಿಲ್ಲದ ಹೋರಾಟ, ಚೀನಾದ ಟೇಬಲ್ ಟೆನ್ನಿಸ್ ಆಟಗಾರನ ಪರಿಯದು. ಅಷ್ಟೇ ರೋಚಕ ಪ್ರತಿಸ್ಪರ್ಧೆಯನ್ನೊಡ್ಡಿದವನು, ಒಂದು ಕೋಲಿನ ಸಹಾಯದಿಂದ ನಿಂತು, ಉಳಿದಿರುವ ಒಂದರ್ಧ ಕೈಯಲ್ಲಿ ಸರ್ವ್ ಮಾಡುತ್ತಾ ಆಡಿದ ಭಾರತೀಯ! ಸ್ಟೂಲ್ ಮೇಲೆ ಕೂತು ಅಷ್ಟು ದೂರ ಜಾವ್ಲಿನ್ ಎಸೆದ ಆ ಪೋರಿಯನ್ನು, ಮರಳಿ ಆಕೆಯ ಕುರ್ಚಿಯ ಮೇಲೆ ಕೂರಿಸಿದಾಗಲೇ ತಿಳಿದದ್ದು ಆಕೆಯ ದೇಹದ ಕೆಳಾರ್ಧ ಸ್ವಾಧೀನದಲ್ಲಿಲ್ಲವೆಂದು! ಇವರುಗಳನ್ನೇ ವಿಕಲಚೇತರನರೆಂದಿದ್ದು?? ಇಷ್ಟಕ್ಕೂ ಇಂತದೊಂದು ಕ್ರೀಡಾಕೂಟದ ಪರಿಕಲ್ಪನೆ ಶುರುವಾಗಿದ್ದೇ, "ವಿಕೃತ ಚೇತನ"ರ ಯುದ್ಧದಾಹಕ್ಕೆ ಬಲಿಯಾಗಿ ಅಂಗವಿಕಲರಾದವರ ಪುನಶ್ಚೇತನದ ನಿಟ್ಟಿನಲ್ಲಿ.


ಗೆಳೆಯ ಗೆದ್ದಾಗ ಚಪ್ಪಾಳೆ ಹೊಡೆದು ಹರ್ಷಿಸಲು ಕೈಗಳಿಲ್ಲ, ಓಡಿ ಹೋಗಿ ತಬ್ಬಿಕೊಳ್ಳಲು ಕಾಲುಗಳಿಲ್ಲ. ಆದರೂ ಕೂಗುತ್ತಾ, ಕಿರಿಚುತ್ತಾ, ಕಣ್ಣುಗಳಲ್ಲೇ ತಮ್ಮದೇ ರೀತಿಯಲ್ಲಿ ಅಭಿವ್ಯಕ್ತಿಸುತ್ತಾ ಅವರನ್ನವರೇ ಅಭಿನಂದಿಸುತ್ತಿದ್ದ ರೀತಿ....! ಅಭಿನಂದಿಸಲು ಹೊರಗಿನ ಪ್ರೇಕ್ಷಕರಾದರೂ ಯಾರಿದ್ದರು ಬಿಡಿ. ರಾತ್ರಿಯೇ ಸರತಿಯಲ್ಲಿ ನಿಂತು ೩ ದಿನಗಳ ನಂತರದ ಮ್ಯಾಚಿಗೆ ನೂಕುನುಗ್ಗಲಿನಲ್ಲಿ ಟಿಕೆಟ್ ತೆಗೆದುಕೊಂಡು ಕ್ರೀಡಾಂಗಣ ಭರ್ತಿಮಾಡುವ ಜನ, ಉಚಿತಪ್ರವೇಶವಿದ್ದರೂ, ಇಂತಹ ಕ್ರೀಡಾಕೂಟಗಳಿಗೆ ಬಾರದಿರವುದು ಆಶ್ಚರ್ಯವೇ ಆಗದಷ್ಟರ ಮಟ್ಟಿಗೆ ನಮಗೆ ಅಭ್ಯಾಸವಾಗಿಬಿಟ್ಟಿದೆ. ಆಯೋಜಕರು ಹೇಳುತ್ತಿದ್ದರು, "ಭಾರತದಲ್ಲಿ ಜನ ಬಂದರೆ ಪವಾಡ, ಚೀನಾದಲ್ಲಿ ಜನ ಬಾರದಿದ್ದಿದ್ದರೆ ಪವಾಡ! ಆದರೆ ಅಲ್ಲಿಯೂ ಪವಾಡವಾಗಿರಲಿಲ್ಲ, ಇಲ್ಲಿಯೂ ಪವಾಡವಾಗಲಿಲ್ಲ!" ಒಮ್ಮೆ ನಮ್ಮ ಪತ್ರಿಕೆಗಳ ಕ್ರೀಡಾಪುಟವನ್ನೊಮ್ಮೆ ನೋಡಿದರೆ ಸತ್ಯ ಕಣ್ಣಿಗೆ ರಾಚುತ್ತದೆ. ಕೆಲಕ್ರೀಡೆಗಳ ವರದಿಗಳು ಪುಟದ ತುಂಬಾ, ಇನ್ಕೆಲವು ಮೂಲೆಗುಂಪು. ಪ್ರೆಸ್ ಮೀಟ್ ಕರೆದು ಮಾಹಿತಿಯನ್ನು ಧಾರಾಳವಾಗಿ ನೀಡಿದ್ದರೂ, ಈ ಕ್ರೀಡಾಕೂಟದ ಕುರಿತು ಪತ್ರಿಕೆಗಳಲ್ಲಿ ಬಂದದ್ದೆಷ್ಟು? ಜನರಿಗೆ ತಲುಪಿದ್ದೆಷ್ಟು? ನಾಯಿ ಬಾಲ ಡೊಂಕು, ಸರಿ, ಚಿಕ್ಕದಾಗಿ ಹಾಕಿದ್ದರೂ ಪರವಾಗಿಲ್ಲ, ಆದರೆ ವಿಕಲಚೇತನರೆಂದು ಯಾಕೆ ಅವಮಾನ ಮಾಡುತ್ತೀರಿ? IWAS (International wheelchair & Amputees Sports Federation) World Games 2009 ಅಂದರೆ "ಅಂತರರಾಷ್ಟ್ರೀಯ ವಿಕಲಚೇತನರ ಕ್ರೀಡಾಕೂಟ" ಎಂತಲೇ??!!


ಪಾಶ್ಚಿಮಾತ್ಯ, ಅಭಿವೃಧ್ಧಿ ಹೊಂದಿರುವ ದೇಶಗಳಲ್ಲಿರುವ ಶೇಕಡಾ ಒಂದರಷ್ಟು ಸವಲತ್ತುಗಳು ಇವರಿಗೆ ನಮ್ಮ ದೇಶದಲ್ಲಿ ಇಲ್ಲ. ಸಾರ್ವಜನಿಕ ಸಾರಿಗೆಯಲ್ಲಿ, ಆಸ್ಪತ್ರೆಗಳಲ್ಲಿ, ಅಂಗಡಿ ಮುಗ್ಗಟ್ಟುಗಳಲ್ಲಿ, ಚಲನಚಿತ್ರ ಮಂದಿರಗಳಲ್ಲಿ ಇವರಿಗೆ ಅನುಕೂಲವಾಗುವಂತಹ ವ್ಯವಸ್ಥೆ ಎಷ್ಟಿದೆ ನಮ್ಮಲ್ಲಿ? ಬಸ್ ಗಳಲ್ಲಿ ಮೊದಲೆರಡು ಸೀಟ್ ರಿಸರ್ವೇಷನ್ ನೋಡಿರುತ್ತೇವೆ. ಅಷ್ಟೆತ್ತರ ಮೆಟ್ಟಿಲುಗಳನ್ನು ಆ ಜನಗಳ ತಿಕ್ಕಾಟದ ನಡುವೆಯೂ ಹತ್ತಿಬಂದು ಕೂರುತ್ತಾರೆ, "ವಿಕಲಚೇತನರಿಗೆ" ಎಂಬ ಹೆಸರಿನಡಿಯಲ್ಲಿ!! ಸರ್ಕಾರವನ್ನೂ, ವ್ಯವಸ್ಥೆಯನ್ನೂ ದೂರುವ ಮೊದಲು, ನಮ್ಮ ಧೋರಣೆಯನ್ನು ಬದಲಿಸಿಕೊಳ್ಳುವ ಜರೂರತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಕ್ಷುಲ್ಲಕವೆನಿಸುವ ಎಷ್ಟೋ ಕೆಲಸಗಳು ಅವರಿಗೆ ಮಹತ್ವದ್ದಾಗಿರುತ್ತವೆ ಎನ್ನುವ ಅರಿವು ನಮಗಿರಬೇಕು. "ಪಾಪ.." ಮೊದಲು ಈ ಪದವನ್ನು ಇವರ ಮುಂದೆ ಪ್ರಯೋಗಿಸುವುದನ್ನು ನಿಲ್ಲಿಸಿ ದಯವಿಟ್ಟು! ನಮ್ಮ ಕರುಣೆಯ ಅಗತ್ಯ ಅವರಿಗಿಲ್ಲ. ಅವರ ನ್ಯೂನ್ಯತೆಯನ್ನು ಪದೇಪದೇ ನೆನಪಿಸಿ ಅವರ ಅಂತ:ಶಕ್ತಿಯನ್ನು ಕೊಲ್ಲುವ ಕೆಲಸ ಮೊದಲು ನಿಲ್ಲಬೇಕಿದೆ. "ಮೊದ್ಲೇ ಕೈಯಿಲ್ಲ, ನೀನ್ಯಾಕೆ ಬರ್ಲಿಕ್ಕೆ ಹೋದೆ, ನಾನೇ ತಂದುಕೊಡ್ತಾ ಇರ್ಲಿಲ್ವ?", "ಕೈಕಾಲಿಲ್ಲ, ಆ ಕುರ್ಚಿ ಮೇಲೆ ಕುತ್ಕೊಂಡು ಶಾಪಿಂಗ್ ಮಾಡೋ ಹುಚ್ಚು ಏನು ಇವ್ಳಿಗೆ, ಯಾರ್ಗಾದ್ರು ಹೇಳಿದ್ರೆ ತಂದ್ಕೊಡ್ತಾ ಇರ್ಲಿಲ್ವ?... ಇಂತಹ ಪ್ರಜ್ಞಾಹೀನ ಮಾತುಗಳನ್ನಾಡುವವರಿಗೆ "ವಿಕಲ ಚೇತನ" ಎಂಬ ಪದ ಸರಿಯಾಗಿ ಒಪ್ಪುತ್ತದೆ. ಒಂದು ದಿನ ಬಿಎಮ್ಟಿಸಿ ಬಸ್ಸಿನಲ್ಲಿ, ಕಾಲು ಸ್ವಲ್ಪ ಊನವಾಗಿದ್ದ ಮಹಿಳೆಯೊಬ್ಬರು ಹತ್ತಿದ್ದರು. ಅವರಿಗಾಗಿ ಕಾದಿರಿಸಲಾಗಿದ್ದ ಸೀಟಿನಲ್ಲಿ ಯುವತಿಯೊಬ್ಬಳು ಹ್ಯಾಂಡ್ಸ್ ಫ್ರೀ ಬಳಸಿ ಮಾತನಾಡುವುದರಲ್ಲಿ ನಿರತಳಾಗಿದ್ದಳು. ಆದ್ದರಿಂದ ಸ್ವಲ್ಪ ಜೋರಾಗೇ ಹೇಳಿ ಎಬ್ಬಿಸಿ ಕೂರಬೇಕಾಯಿತು. ಅಷ್ಟಕ್ಕೇ ನನ್ನ ಪಕ್ಕ ನಿಂತಿದ್ದ ವ್ಯಕ್ತಿ, "ಕಾಲು ಸರಿಯಿಲ್ದಲೇ ಇಷ್ಟು ಜೋರು ಬಾಯಿ, ಇನ್ನೇನಾದ್ರು ಅದೂ ಸರಿಯಿದ್ದಿದ್ದ್ರೆ...." ಅಂದ್ರು. ನಾನಂದೆ "ನೀವೊಂದೆರಡ್ನಿಮಿಷ ಅವರ ಥರ ಕಾಲು ಸೊಟ್ಟಗೆ ಮಾಡ್ಕೊಂಡು ನಿಂತ್ಕೊಳಿ ನೋಡೋಣ?". ಆಕೆ ತನ್ನ ಹಕ್ಕು ಚಲಾಯಿಸಿದ್ದೇ ತಪ್ಪೇ?! "Treat people, like the way you want to be treated" - ಒಳ್ಳೆಯ ಜೋಕ್ ಅನ್ಸತ್ತೆ. ನಮ್ಮ ತಟ್ಟೇಲಿ ನಾಯಿನೇ ಸತ್ತು ಬಿದ್ದಿರತ್ತೆ, ಆದರೆ ನಮ್ಮ ಮಾತೆಲ್ಲ ಪಕ್ಕದವರ ತಟ್ಟೆಯಲ್ಲಿ ಬಿದ್ದಿರುವ ನೊಣದ್ದೇ! ಇದೇ ಪಾಶ್ಚಿಮಾತ್ಯ ದೇಶದಲ್ಲಾಗಿದ್ದರೆ.......! ನಮಗೆ ಒಗ್ಗತ್ತೋ ಇಲ್ವೋ, ನಮಗೆ ಬೇಕೋ ಬೇಡ್ವೋ, ಆದ್ರೂ ಪಾಶ್ಚಿಮಾತ್ಯರ ಉಡುಗೆ-ತೊಡುಗೆ, ಆಹಾರ ಕ್ರಮ ಇವೆಲ್ಲವನ್ನೂ ಢಾಳಾಗಿ ಅನುಕರಣೆ ಮಾಡ್ತೀವಿ, ಆದರೆ ಅವರ ಸೃಜನಶೀಲತೆ, ಸಹಾಯಹಸ್ತ, ಶಿಸ್ತು, ಸಮಯಪ್ರಜ್ಞೆ ನಮಗ್ಯಾಕೋ ಬೇಕಿಲ್ಲವಾಗಿದೆ!


ಜನರ ಅಲ್ಪ ಪ್ರೋತ್ಸಾಹದ ನಡುವೆಯೂ ಯಶಸ್ವಿಯಾಗಿ ಕ್ರೀಡಾಕೂಟವನ್ನು ನಡೆಸಿದ ಆಯೋಜಕರಿಗೆ ವಂದನೆಗಳು. ಪದಕ ಪಟ್ಟಿಯಲ್ಲಿ ಭಾರತಕ್ಕೆ ಎರಡನೇ ಸ್ಥಾನ. ಎಲ್ಲ ಕ್ರೀಡಾಪಟುಗಳಿಗೂ ಅಭಿನಂದನೆಗಳು. ಯಾರು ಸೋತರೂ, ಯಾರು ಗೆದ್ದರೂ, ಕೊನೆಗೆ ಗೆಲ್ಲುವುದು ಕ್ರೀಡೆಯೇ ಎನ್ನುವ, ದೇಶ ಭಾಷೆಗಳನ್ನುಮೀರಿದ ಆ ಕ್ರೀಡಾಮನೋಭಾವದಿಂದ ಆಡುತ್ತಾ ಕ್ರೀಡಾಕೂಟಕ್ಕೆ ಮೆರುಗು ನೀಡಿದ ಕ್ರೀಡಾಪಟುಗಳು, ಮಾಕಿ-ಮಂಕಿ ಎನ್ನುತ್ತ ಮೈದಾನವನ್ನು ರಣರಂಗವಾಗಿಸುವ, ಕ್ರೀಡೆಯ ಉದ್ದೇಶಕ್ಕೇ ಮಸಿಬಳಿಯುವಂತಹ "ಡೋಪಿಂಗ್" ನಂತಹ ಅಭ್ಯಾಸವನ್ನು ಹುಟ್ಟು ಹಾಕಿರುವ ಸಕಲಾಂಗರ ಕ್ರೀಡಾಕೂಟಗಳಿಗೆ ನಿಜಕ್ಕೂ ಮಾದರಿಯಾಗಿದ್ದರು. ಜೀವನದಲ್ಲಿ ಸಾಧನೆಗೈಯಲು ಬೇಕಾಗಿರುವುದು ಕೇವಲ ಅಂಗಾಂಗಗಳಲ್ಲ, ಆಸಕ್ತಿ, ಛಲ, ಚೇತನ, ಚೈತನ್ಯ. ಅಂತಹ ಅಂತ:ಶಕ್ತಿಯ ಸದುಪಯೋಗದಲ್ಲಿ ಈ "ಸಚೇತ"ರು ನಮಗೆ ಮಾದರಿ ಎಂದರೆ ಅತಿಶಯೋಕ್ತಿಯಲ್ಲ. ಇಂತಹ ಸಚೇತನರನ್ನು, ವಿಕಲಚೇತನರೆಂದು ಅವಮಾನ ಮಾಡಿದ್ದರೆ, ಹಾಗೆ ಕರೆವನನ್ನು ಪಾಶ್ಚಿಮಾತ್ಯ ದೇಶಗಳಲ್ಲಿ ಹಿಂಡಿ ಹಿಪ್ಪೇಕಾಯಿ ಮಾಡಿಹಾಕುತ್ತಿದ್ದರು (Sue ಮಾಡುತ್ತಿದ್ದರು). ಆದರೆ ಇದು ನಮ್ಮ ಭಾರತ. ಅದರಲ್ಲೂ ಕಸ್ತೂರಿಯ ಕಂಪಿರುವ ಕನ್ನಡದ ಕರ್ನಾಟಕ. ಇಲ್ಲಿ ಸಬ್ ಕುಚ್ ಚಲ್ತಾ ಹೈ! ಭಾಷೆಯನ್ನೂ, ಭಾವನೆಗಳನ್ನೂ any one can take for a ride! It's a silly matter you know!



[ಇಂದು ವಿಶ್ವ ಅಂಗವಿಕಲರ ದಿನ. ಇವರುಗಳು ನಮ್ಮ ಕರುಣೆಯಿಂದಲ್ಲ, ಅವರ ಹಕ್ಕಿನಿಂದ ಅವರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಲಿ. ನಮ್ಮಿಂದೇನಾದರೂ ಸಹಾಯವಾಗುವಂತಿದ್ದರೆ ಮನ:ಪೂರ್ವಕವಾಗಿ ಮಾಡೋಣ. ಸಾಧ್ಯವಾಗದಿದ್ದಲ್ಲಿ ಸುಮ್ಮನಿರೋಣ, ಆದರೆ ಅವರ ಆ ಬದುಕೆನೆಡೆಗಿನ ಪ್ರೀತಿಗೆ, ಚಿಮ್ಮುವ ಉತ್ಸಾಹಕ್ಕೆ ತಣ್ಣೀರೆರಚುವುದು ಬೇಡ.]

Monday, November 30, 2009

ಮಹಾಶ್ವೇತ

"ಶರಣ್ರೀ... ಏನ್ರೀ ಭಾಳ ಬಿಜಿ ಇರಂಗದ. ಕಾಣಂಗೇ ಇಲ್ವಲ್ಲಪ್ಪ ಮಂದಿ!"

"ಹಂಗೇನಿಲ್ರೀ... ಹಿಂಗೇ ನಡೀಲಿಕ್ಹತ್ತದ. ನೀವೇ ಭಾಳ ಬಿಜಿ ಇದ್ದೀರಿ ಕಾಣ್ತದ. ಮುಂಜಾನಿನೂ ಕಾಣಂಗಿಲ್ಲ, ಸಂಜಿಮುಂದೂ ಕಾಣಂಗಿಲ್ಲ. ರೂಮ್ ಏನಾರ ಬದ್ಲಿ ಮಾಡೀರೇನ್ ಮತ್ತ?"

"ಇಲ್ರೀ, ಊರ್ಕಡೀಗೆ ಹೋಗಿದ್ನಾ.."

"ಮನ್ಯಾಗ ಎಲ್ರೂ ಆರಾಮಿದಾರಲ್ರೀ ಮತ್ತ? ಇಲ್ಲಾ... ಹೋಳ್ಗೀ ಊಟ ಏನಾದ್ರೂ ಹಾಕಸ್ತೀರೇನಪ್ಪ ಮತ್ತ?"

"ಅದನ್ನೇನ್ ಕೇಳ್ತೀರಿ.. ಭಾರಿ ದೊಡ್ಡ್ ಕಥಿನ ಅದ ಅದು. ನಿಮ್ ಪುಸ್ತಕಾನ ಚೀಲಕ್ಹಾಕಿ ಕುಂದರ್ರೀ ಮೊದ್ಲು. ನಾ ಹೇಳ್ತೀನಂತ.."

"ಶುರು ಹಚ್ಕೊಳ್ರೀ ನಿಮ್ ಕತಿನ.. ಮಳಿ ಬಂದ್ ನಿಂತದ. ಕಡೀಮಿ ಅಂದ್ರೂ ಎರಡೂವರಿ ತಾಸಾಗ್ತದ ಮನಿ ಮುಟ್ಲಿಕ್ಕ"

"ಬೇಸ್ತ್ವಾರ ಮನಿಗೆ ಫೋನ್ ಹಚ್ಚಿದ್ನಾ ನಮ್ಮಾವಾರು ಫೋನ್ ತಕ್ಕೊಂಡ್ರೀ.. ಎರಡ್ ದಿನ ಸೂಟಿ ತಗೊಂಡ್ ಬಾರ್ಪಾ ಊರಿಗೆ, ಹಿಂಗೆ ಕೆಲ್ಸದ ಅಂದ್ರೀ.. ನಂಗೂ ಈ ಕೆಲ್ಸಬೊಗ್ಸಿ, ಆ ಬಾಸು ಎಲ್ಲ ಸಾಕಾಗಿತ್ತಾ, ಸಿಕ್ ಲೀವ್ ಬೇರೆ ಬೇನಾಮಿ ಬಿದ್ದಿದ್ವಲ್ರೀ, ಅವ್ನೇ ಪ್ಲಾನ್ ಮಾಡ್ಕೊಂಡು ಹೊರೆಟ್ನಾ.."

"ಖರೇನ ನಿಮ್ಗ ಮೈಯಾಗ ಆರಾಮಿಲ್ಲ ಅನ್ಕೊಂಡಿದ್ನಲ್ರೀ ನಾ!"

"ಹ ಹ.. ಮುಂದೇನಾತು ಕೇಳ್ರಲ.. ಊರಿಗ್ ಹೋದ್ನಾ, ಮಾವಾರು ಹುಡುಗಿ ನೋಡ್ಲಿಕ್ಕೆ ಹೋಗೋದದ ಹೊರಡ್ನೀ ಅಂದ್ರೀ.. ಅಲ್ರೀ ಮಾವಾರೆ, ಮೊದ್ಲಿಗೆ ಹುಡುಗಿ ಫೋಟೊ ಗೀಟೋ ತೋರ್ಸ್ಬೇಕಲ್ರೀ ನೀವು, ಹಿಂಗೇ ನಿಂತ್ನಿಲುವ್ನಾಗೆ ಹೊರ್ಡು ಅಂದ್ರೆ ಹೆಂಗ್ರೀ? ಅಂದ್ನಾ. ಇಲ್ಲೋ ಮಾರಾಯ, ಭಾಳ ನಾಚಿಕಿ ಸ್ವಭಾವ ಐತಿ ಹುಡ್ಗೀದು. ಅಕಿದು ಪಟಗಿಟ ಏನೂ ಇಲ್ಲಂತ. ನಾನೆಲ್ಲ ನೋಡೀನಿ. ಛಲೋ ಮಂದಿ. ಹುಡ್ಗಿನೋ ಭಾಳ ಚಂದ ಅದಾಳ. ನೀನೇ ನೋಡ್ತೀಯಂತಲ ನಡಿ.. ಅಂದ್ರೀ. ಸರಿ ಅಂತಂದು ಹೊರಟ್ನಾ.."

"ಹ್ಮ್ಮ್.. "

"ನಾನು, ನಮ್ಮವ್ವ, ಅಪ್ಪಾರು, ಚಿಕ್ಕಕ್ಕ, ಮಾವಾರು ಹೋಗಿದ್ವಿ. ಹುಡ್ಗಿ ಕರ್ಕೊಂಡು ಬಂದ್ರೀ. ನನಿಗೆ ಕೈ ಕಾಲು ನಡುಗ್ಲಿಕ್ಕೇ ಹತ್ತಿದ್ವು ರೀ.. ಒಮ್ಮಿಗೇ ಛಳಿಜ್ವರ ಬಂದಂಗಾತು ನೋಡ್ರೀ.."

"ಯಾಕ್ರೀs?!!!"

"ಅಲ್ರೀ, ಏನ್ ಛಂದ ಇದ್ಲಂತೀರ್ರೀ ಹುಡ್ಗಿ!! ಕೈತೊಳ್ಕೊಂಡು ಮುಟ್ಬೇಕ್ರೀ.."

"ಏನ್ರೀ ನೀವೂ ಈ ಮಟ್ಟಿಗೆ ಹಾಸ್ಯ ಮಾಡೋಂಗಿದ್ಲೇನ್ರೀ ಹುಡುಗಿ??!!"

"ಅಯ್ಯೋ ಶಿವ್ನೇ! ಹಂಗ್ಯಾಕಂತೀರ್ರೀ? ಖರೇನೇ ಭಾಳ ಛಂದಿದ್ಲ್ ರೀ ಹುಡ್ಗಿ. ಬೆಳ್ಳಗೆ ಭಾರೀ ಲಕ್ಷಣ ಇದ್ಲ್ ರೀ! ಒಳ್ಳೇ ಪ್ರೀತಿ ಝಿಂಟಾ ಇದ್ದಂಗಿದ್ಲು ರೀ. ನಕ್ರೆ ಹಂಗೇ ಡಿಂಪಲ್ ಬೀಳ್ತಿದ್ವು ರೀ. ನಾ ನೋಡಿದ್ರ ಹಿಂಗದೀನಿ. ಭದ್ರಾವತಿ ಚಿನ್ನ. ನಾನೇನು ಅಕೀನ ಒಪ್ಪದು, ಇನ್ನೂ ಅಕೀನ ನನ್ನ ಒಪ್ಪಿದ್ರ ಭೇಷಾತು ಅಂದ್ಕೊಂಡೆ ನಾ.."

"ಮುಂದೇನಾತ್ರೀ?"

"ಸರಿ ಅಂತಂದು, ಮನಿಗೆ ಬಂದ್ವಿ. ನಮ್ಮ ಅವ್ವಾರಿಗೆ ಹೇಳಿ ಕಳಿಸಿದ್ರೀ ಅವ್ರು. ಅವ್ವ, ಮಾವಾರು ಹೋದ್ರೀ. ಅವ್ವಾರನ್ನ ಒಳಕರ್ದು ಹುಡ್ಗಿ ಕುತ್ಗಿ ಹತ್ರ ಒಂದು ಸಣ್ ಬಿಳಿ ರಂಗಿಂದು ಕಲೆ ತೋರ್ಸಿ, ದೊಡ್ಡಾಕ್ಟ್ರಿಗೆ ತೋರ್ಸೇವ್ರೀ, ತೊನ್ನಿರ್ಬಹುದು ಅಂದಾರ ಅಂದ್ರಂತ್ರೀ.."

"........................."

"ಭಾಳ ಬೇಸ್ರಾಕತ್ರೀ. ಹಿಂಗಾಗ್ಬಾರ್ದಿತ್ತಲ್ರೀ. ಅಲ್ಲ ಆಟೊಂದು ಛಂದ ಇದ್ಳ್ ರೀ ಹುಡ್ಗಿ.. ಅಕೀಗೆ ಹಿಂಗಂದ್ರ..."

".........................."

"ಏನ್ರೀ ಸೈಲೆಂಟ್ ಆಗ್ಬಿಟ್ರಲ್ರೀ, ಏನಾರ ಮಾತಾಡ್ರೀ.."

"..ಹಿಂಗ ಏನೋ... ಆಮೇಲೇನಾತ್ರೀ?"

"ಇಲ್ರೀ, ಅದು, ಅದೇನೋ ಅಂತಾರಲ್ರೀ.. ಹಾ.. ವಂಶಪಾರಂಪರಿಕ.. ಹಂಗಂತ್ರೀ ಅದು. ಮನ್ಯಾಗ ಯಾರೂ ಒಪ್ಲಿಲ್ಲ"

"ಖಾತ್ರಿ ಐತೇನ್ರೀ ನಿಮಗ? ಅದು ಖರೇನ ಹೆರೆಡಿಟ್ರಿ ಅಂತ? ಎಲ್ಲೋ ಓದಿದ್ನಾ ಹಂಗಲ್ಲ ಅಂತ.."

"ಇಲ್ರೀ ಅದು ಹಂಗ ಅಂತ.."

"ಅವ್ರ ಮನ್ಯಾಗೆ ಬೇರೆ ಯಾರಿಗಾದ್ರೂ ಐತೇನ್ರೀ ಇಲ್ಲಾ ಇತ್ತಂತೇನ್ರೀ?"

"ನನಿಗೆ ತಿಳ್ದಂಗ ಯಾರಿಗೂ ಇಲ್ರೀ.."

"ಮತ್ತಕೀಗ ಹೆಂಗ್ಬಂತಂತ್ರೀ?!"

"ನಂಗೊತ್ತಿಲ್ರೀ. ಹಂಗೂ ಅಕ್ಕ ಕೇಳಿದ್ಲ್ರೀ.. ಹೆಂಗಪ ನೀನೇನಂತಿ ಅಂತ.. ನಾನೇನನ ಹ್ಞೂ ಅಂದ್ರ ಅವ್ವ ಪೊರಿಕಿ ತಗಂಡ್ ಸಾಯೋ ತನ ಹೊಡೀತಾಳ..ಅಕಿ ಒಪ್ಪಂಗಿಲ್ತಗಿ ಅಂದ್ನಾ.."

"ಮದ್ವೀ ಮೊದ್ಲೇ ನಿಮ್ಮನ್ನ ಕರ್ಸಿ ಹೇಳಿದ್ದು ಛಲೋ ಆತ್ನೋಡ್ರಿ.. ಭಾಳ ಒಳ್ಳೆ ಮಂದಿ ಅದಾರ.. ಇಲ್ಲಾಂದ್ರ ಅದೇನೋ ಗಾದೆ ಹೇಳ್ತಾರಲ್ರೀ.. ಸಾವ್ರ ಸುಳ್ಹೇಳಿ ಒಂದ್ಮದ್ವಿ ಮಾಡು ಅಂತ, ಹಂಗೇನಾದ್ರು ಆಗಿದ್ರೆ ಏನ್ ಕತಿರೀ?"

"ಇಲ್ರೀ, ಅವ್ರು ಹೇಳ್ಳಿಕ್ಕೇ ಬೇಕಿತ್ರೀ. ಯಾವಾಗ ಗೊತ್ತಾದ್ರೂ ಹುಡ್ಗಿಗಾನ ರೀ ಕಷ್ಟ. ಒಂದಪ ಮದ್ವಿ ಆದ್ಮೇಲೆ ಗೊತ್ತಾತು ಅಂತಿಟ್ಕೋರ್ರೀ.... ಆಮೇಲಾದ್ರೂ ಅಕಿ ಸುಖ್ನಾಗಿ ಇರ್ತಾಳಂತ ಏನ್ಖಾತ್ರಿ ಇದರೀ ನಿಮಗ? ಕಟ್ಕೊಂಡವ ಬಿಟ್ರೇನ್ಮಾಡ್ತಿದ್ರೀ? ಅವ್ರು ಹೇಳ್ಳೇ ಬೇಕು.. ಹಂಗದ ಸಂದರ್ಭ. ಕಷ್ಟದ ರೀ ಹೆಣ್ಮಕ್ಳ ಜೀವನ.."

"..............................."

[ಯೌವನದ ಉನ್ಮಾದದಲ್ಲಿ ಸಂತೋಷವನ್ನು ತನ್ನದೇ ರೀತಿಯಲ್ಲಿ ಅನುಭವಿಸಿ, ವಾಸಿಯಾಗಲಾರದ ಖಾಯಿಲೆಯನ್ನು ಅಂಟಿಸಿಕೊಂಡು, ಅದನ್ನು ಮುಚ್ಚಿಟ್ಟು ಮದುವೆಯಾಗಿ, ತನ್ನ ಪತ್ನಿಗೂ ರೋಗವನ್ನು ಧಾರೆಯೆರೆದಿದ್ದವನು................ತನ್ನ ಕೆಲಸದ ಬಗ್ಗೆ ಸುಳ್ಳುಮಾಹಿತಿ ನೀಡಿ ಮದುವೆ ಮಾಡಿಕೊಂಡು ಬಂದು, ಈಗ ತನ್ನ ಹೆಂಡತಿಯ ದುಡಿಮೆಯಲ್ಲಿ ಜೀವಿಸುತ್ತಿರುವುದಲ್ಲದೆ, ಆಕೆಗೆ ಮಾನಸಿಕ, ದೈಹಿಕ ಹಿಂಸೆ ನೀಡುತ್ತಾ, ಮನೆಯವರಿಂದ ದೂರವಿಟ್ಟಿರುವ ಇನ್ನೊಬ್ಬ....... ಕಣ್ಣಾರೆ ಕಂಡಿದ್ದ ಈ ಮಹಾತ್ಮರ ಪತ್ನಿಯರು ಹಾಗೇ ಕಣ್ಮುಂದೆ ಮತ್ತೊಮ್ಮೆ ಹಾದು ಹೋಗುತ್ತಿದ್ದರು......]

"ಮತ್ತೆ ಸೈಲೆಂಟಾದ್ರಲ್ರೀ.. ಏನ್ ಯೋಚ್ನೆ ಮಾಡ್ಲಿಕ್ಹತ್ತೀರಿ?"

"ಏನಿಲ್ರೀ.. ನೀವು ಹೇಳ್ರಲ.."

"ನನ್ನ ದೋಸ್ತ್ ಒಬ್ನದಾನ್ರೀ. ಇದೇ ಪ್ರಾಬ್ಲಮ್ ರೀ. ಹುಡ್ಗಿನ ಎಲ್ರೂ ಒಪ್ಪಿದಾರ್ರೀ. ಮಾತುಕತಿ ಎಲ್ಲ ನಡದದ. ಆದ್ರ ಆಕಿ ಇವ್ನ ಜೋಡಿ ಮಾತ್ರ ಹೇಳ್ಯಾಳಂತ ಹಿಂಗ ಕಾಯಿಲೆ ಅಂತಂದು. ಅವ ನಂಗೇನೂ ಪ್ರಾಬ್ಲಮ್ ಇಲ್ಲ. ಮನ್ಯಾಗ್ ಕೇಳ್ಹೇಳ್ತೀನಿ ಅಂದಾನಂತ್ರೀ. ಮನ್ಯಾಗ್ ಅದೆಂಗ್ ಹೇಳ್ತಾನೋ! ಹೇಳಿದ್ರ ಖರೇನ ಮದ್ವಿ ಮುರಿದ್ ಬೀಳ್ತದ.."

[ಅಲ್ವ! ನೆನ್ನೆ ಮೊನ್ನೆ ಬಂದ ಹುಡುಗಿಗಾಗಿ ಮನೆಯವರ ವಿರೋಧ ಕಟ್ಟಿಕೊಳ್ಳಬೇಕೆ? ಇಷ್ಟು ವರ್ಷ ಸಾಕಿ ಬೆಳೆಸಿದ ತಂದೆತಾಯಿಯರ ಮನಸ್ಸಿಗೆ ನೋವುಂಟು ಮಾಡಬೇಕೆ? ಮನೆಯ ನೆಮ್ಮದಿ ಕದಡಬೇಕೆ? ಮದುವೆ ಅಂದ್ರೆ ಇವರಿಬ್ಬರೇ ಅಲ್ಲ, ಎರಡು ಕುಟುಂಬಗಳ ನಡುವಿನ ಸಂಬಂಧ. ಎಲ್ಲರೂ ಒಪ್ಪಿ ಆದ್ರೆ ಸರಿ. ಅದು ಬಿಟ್ಟು ಹುಡುಗನಿಂದ ಮಾತ್ರ ಈ ತ್ಯಾಗದ ನಿರೀಕ್ಷೆ ಎಷ್ಟು ಸರಿ? ಅನುವಂಶಿಕವಾದ ಕಾಯಿಲೆ ಅಂತ ಮನದ ಮೂಲೆಯಲ್ಲೆಲ್ಲೋ ಭಯ ಇದ್ದೇ ಇರತ್ತೆ. ಜನರ ಕೊಂಕಿನಿಂದಲೂ ತಪ್ಪಿಸಿಕೊಳ್ಳಲಾರ.. ಹೆತ್ತತಾಯಿಗಿಂತ ನೆನ್ನೆ ಮೊನ್ನೆ ನೋಡಿದವಳು ಹೆಚ್ಚಾದಳು.. ಇತ್ಯಾದಿ..]

"ಕಷ್ಟ ಐತ್ರೀ ಹುಡುಗ್ರ ಜೀವ್ನ...."

"ಹೂನ್ರಿ.. ಎಲ್ಲ ಭಾರಿ ಕಾಂಪ್ಲಿಕೇಟೆಡ್ ಅನ್ನಿಸ್ಲಿಕ್ಹತ್ತದ. ಏನೇ ಆಗ್ಲಿ ರೀ ಆ ಹುಡುಗೀನ ಮಾತ್ರ ನಾ ನನ್ ಲೈಫ್ನಾಗೇ ಮರೆಯಂಗಿಲ್ಲ ಬಿಡ್ರೀ. ನಾ ಬೇರೆ ಮದ್ವಿ ಆದ್ರೂ ಅಕಿ ಮಾತ್ರ ನೆನಪಿದ್ದೇ ಇರ್ತಾಳ್ರೀ.."

"......................................."

[ಸುಧಾಮೂರ್ತಿಯವರ "ಮಹಾಶ್ವೇತ" ನೆನಪಾಗುತಿತ್ತು. ಹೆಸರಿಗೆ ತಕ್ಕಂತೆ ಅನುಪಮ ಸುಂದರಿಯಾದ "ಅನುಪಮಾ" ಕಾದಂಬರಿಯ ನಾಯಕಿ. ಬಡ ಸ್ಕೂಲ್ ಮಾಸ್ತರ್ ಶಾಮಣ್ಣನ ಮೊದಲನೇ ಹೆಂಡತಿ ಮಗಳು. ಮಹಾಚತುರೆ. ಈಕೆಯ ಸೌಂದರ್ಯಕ್ಕೆ ಮಾರುಹೋದ ಪುಂಡರೀಕ ವೈದ್ಯನಾದ ಆನಂದ. ಮಹಾನ್ ಶ್ರೀಮಂತ, ಅಷ್ಟೇ ರೂಪವಂತ. ಮದುವೆಯ ನಂತರ ಕಾಣಿಸಿಕೊಳ್ಳುವ ಸಣ್ಣ ಬಿಳಿಯ ಕಲೆಯೊಂದು "ಮಹಾಶ್ವೇತ"ವಾಗಿ ಅನುಪಮಳಿಂದ ಎಲ್ಲವನ್ನೂ ಕಸಿದುಕೊಳ್ಳುತ್ತದೆ. ರೋಗವ ಮುಚ್ಚಿಟ್ಟು ಮದುವೆಯಾದಳು ಎನ್ನುವ ಆರೋಪ ತೂಗುಗತ್ತಿಯಂತೆ ಕಾಡುತ್ತಿರುವಾಗ, ಆಕೆ ಮೋಸ ಮಾಡಿಲ್ಲ ಎನ್ನುವುದಕ್ಕೆ ಇದ್ದ ಒಬ್ಬನೇ ಸಾಕ್ಷಿಯಾದ ಆಕೆಯ ಗಂಡನೂ ಮೌನಕ್ಕೆ ಶರಣಾಗುತ್ತಾನೆ. ವೈದ್ಯನಾಗಿ leukoderma ಕೇವಲ ಒಂದು cosmetic disease, ಅಲಂಕಾರಿಕ ಕಾಯಿಲೆ ಎಂದು ತಿಳಿದವನೇ ಕೈಬಿಟ್ಟ ಮೇಲೆ, ಬಡತನದಲ್ಲಿ ಬೇಯುತ್ತಿರುವ ತವರಿನಲ್ಲೂ ಆಸರೆ ಸಿಗದೆ, ಗಂಡನ ಇನ್ನೊಂದು ಮದುವೆ ತಯಾರಿಯ ಸುದ್ದಿ ತಿಳಿಯಲು, ಸಾಯುವ ಸ್ಥಿತಿಗೆ ಹೋದ ಅನುಪಮ, ತನ್ನ ಅಂತ:ಶಕ್ತಿಯನ್ನು ಕಳೆದುಕೊಳ್ಳದೆ ಮರಳಿಬಂದು ಒಂಟಿಯಾಗಿ ಜೀವನದಲ್ಲಿ ಸಾಧನೆಗೈಯುತ್ತಾಳೆ. ಜೀವನ ಭಾಗ ಎರಡರಲ್ಲಿ ಒಬ್ಬ ಪ್ರಜ್ಞಾವಂತ ವೈದ್ಯನ ನಿಶ್ಕಲ್ಮಶ ಸ್ನೇಹ ದೊರೆಯುತ್ತದೆ. ಅದನ್ನು ಪ್ರೇಮವನ್ನಾಗಿಸುವ ಅವಕಾಶವನ್ನು ನಿರಾಕರಿಸಿ, ಅನಿರೀಕ್ಷಿತವಾಗಿ ಮರಳಿಬರುವೆನೆಂದು ಕೇಳುವ ಹಳೆಯ ಗಂಡನನ್ನೂ ನಿರಾಕರಿಸಿ, ಸ್ವಾಭಿಮಾನಿಯಾಗಿ ಅನುಪಮ ಜೀವನದ ದೋಣಿಯನ್ನು ಮುನ್ನಡೆಸುತ್ತಾಳೆ.

ಸುಧಾಮೂರ್ತಿಯವರದೇ "Wise & Otherwise" ನಲ್ಲಿ ಇನ್ನೊಂದು ಕಥೆಯಿದೆ. "ಮಹಾಶ್ವೇತ" ವನ್ನು ಓದಿ, ತನ್ನ ನಿರ್ಧಾರವನ್ನು ಬದಲಿಸಿ, leukoderma ಪೀಡಿತ ಹೆಣ್ಣೊಬ್ಬಳಿಗೆ ಬಾಳು ಕೊಟ್ಟ ಸತ್ಯ ಘಟನೆ. ಇವೆರಡನ್ನೂ ಓದಿದಾಗ, ಹೀಗೂ ಉಂಟೆ?! ಇದು ಜೀವನವಲ್ಲ ಕಥೆ.... ಎಂದು ಸುಮ್ಮನಾಗಿದ್ದೆ... ಆದರೀಗ.........]

"ಆವಾಗ್ಲಿಂದ ನೋಡ್ಲಿಕ್ಹತ್ತೇನಿ..ಏನೋ ಬ್ಯಾಕ್ಗ್ರೌಂಡ್ ಪ್ರೊಸೆಸ್ ನಡ್ಸೀರಿ.. ಏನದು ನಮ್ಗೊಂದಿಷ್ಟು ಹೇಳ್ರಲಾ.."

"ಏನಿಲ್ರೀ..ಹಿಂಗss.."

"ಈಗೇನು..ನೀವು ಹೇಳ್ತೀರೋ ಇಲ್ಲೋ?"

[ನಿಮ್ಮ ಕರ್ಮ!.. ನನ್ನ ತಲೆಯ ಹುಳ ಅವರ ತಲೆಗೆ ವರ್ಗಾವಣೆ ಮಾಡಿದ್ದಾಯ್ತು]

"ಈಗ ನಾನೇನ್ ಮಾಡ್ಬೇಕಂತೀರಿ?"

"ಅದ್ಕೇ ಹೇಳಿದ್ನಾ..ಸುಖಾಸುಮ್ನೆ ಯಾಕ್ ಕೆದಕ್ತೀರಿ, ನಾ ಹೇಳಂಗಿಲ್ಲ ಅಂತ..."

"......................"

"ಒಂದಂತೂ ಖರೇ ರಿ.. ನೀವೇನ್ ಮಾಡ್ಬೇಕಂತ ಯಾರೂ ನಿಮ್ಗೆ ಹೇಳಂಗಿಲ್ಲ. ಹೇಳ್ಲೂ ಬಾರ್ದು. ಅದು ಸರಿಯಿರಂಗಿಲ್ಲ.. ನಿರ್ಧಾರ ಯಾವತ್ತಿದ್ರೂ ನಿಮ್ದೇ ಇರ್ತೈತ್ರೀ.."

"ಅಂತೂ ಒಳ್ಳೇ ಇಬ್ಬಂದಿಗೆ ಸಿಕ್ಸಿದ್ರೀ ರೀ ನನ್ನ.."

"....................."

[ಅವರು ಸಿಕ್ಕಾಗೆಲ್ಲ ಈ ವಿಷಯ ನೆನಪಿಸ್ತಾರೆ. ಸಾಧ್ಯವಾದಷ್ಟು ವಿಷಯಾಂತರ ಮಾಡ್ತೀನಿ. ಸಿಕ್ಕಾಗೆಲ್ಲ ಈ ವಿಷ್ಯ ಮಾತ್ರ ಮಾತಾಡೋದು ಬೇಡಪ್ಪ ಅಂತ ಬೇಡ್ಕೋತೀನಿ! ನಾ ಮಾಡಿದ್ದು ತಪ್ಪಾ? ಅವ್ರಿಗೆ ಆ ಕಥೆ ಹೇಳಬಾರದಿತ್ತಾ? ನನಗೇನೋ ಒಂದು ಬಗೆಯ ಅಪರಾಧಿ ಭಾವ ಕಾಡ್ತಾ ಇದೆ. ಯಾಕಂದ್ರೆ ಅವರ ಸ್ಥಾನದಲ್ಲಿ ನಾನಿದ್ದಿದ್ದ್ರೆ ಏನು ಮಾಡ್ತಿದ್ದೆ? ಉತ್ತರ ಸಿಕ್ಕಿಲ್ಲ.......... ನಿರ್ಧಾರ ಸುಲಭವಲ್ಲ...........]

Friday, November 06, 2009

ಅರ್ಥ

ಭಾರತದ ಸಾಮಾನ್ಯ ಕುಟುಂಬಗಳಲ್ಲಿ ಆರ್ಥಿಕ ಕಾರಣಗಳಿಂದ ಹುಟ್ಟುತ್ತಿರುವ ಸಣ್ಣ ಜಗಳಗಳು ಮನೆಯಲ್ಲಿರುವ ಮಕ್ಕಳ ಮನಸ್ಸುಗಳಲ್ಲಿ ಗೊಂದಲಗಳನ್ನು ಏಳಿಸುತ್ತಿವೆ. ಮನೆಯಲ್ಲಿ ನೆಮ್ಮದಿ ಕಾಣದ ಮಕ್ಕಳು ಹಿಂಸೆಯಲ್ಲಿ ಆನಂದ ಕಾಣುವಂತಹ ಸ್ಥಿತಿಯುಂಟಾಗುತ್ತಿದೆ. ಇದರಿಂದಾಗಿ ನಮ್ಮ ಯುವಜನಾಂಗವು ಆತಂಕವಾದ ಕಡೆಗೆ ಅಥವಾ ಕೋಮುವಾದಿತ್ವ ಅಥವಾ ಮೂಲಭೂತವಾದಿತ್ವದ ಕಡೆಗೆ ತಿರುಗುತ್ತಿದ್ದಾರೆ. ಇದರಿಂದ ನಮ್ಮ ದೇಶಾದ್ಯಂತ, ಜಾತಿ-ಧರ್ಮಗಳನ್ನು ಮೀರಿ ಹಿಂಸಾಚಾರಗಳು ಆಗುತ್ತಿವೆ. ಇದರಿಂದಾಗಿ ನಮ್ಮ ದೇಶವು ವಿಚ್ಛಿದ್ರಕಾರಿ ಮನಸ್ಸುಗಳ ಕೈಯಲ್ಲಿ ಹೇಗೆ ಸೇರಿಹೋಗುತ್ತಿದೆ ಎಂಬುದನ್ನು ಪ್ರತಿನಿತ್ಯ ಪತ್ರಿಕೆಗಳು ಹೆಣಗಳ ಸಂಖ್ಯೆಯನ್ನು ಮುಖಪುಟದಲ್ಲಿಯೇ ಹಾಕುವ ಮೂಲಕ ದಾಖಲಿಸುತ್ತಿವೆ. ಇವೆಲ್ಲವುಗಳ ಪರಿಣಾಮವಾಗಿ ಚಿತ್ರಿತವಾದದ್ದೇ "ಅರ್ಥ". - ಇದು "ಅರ್ಥ" ಚಿತ್ರದ ಕುರಿತಾಗಿ ಸಮುದಾಯ ((ಸಮುದಾಯ ಚಿತ್ರೋತ್ಸವ - ೨೦೦೯) ನೀಡಿರುವ ಒಕ್ಕಣೆ.

"ಅರ್ಥ" - ಈ ಪದ, ತಿರುಳು, Meaning ಎಂಬುದಾಗಿ ಮತ್ತು ಹಣ, ವಿತ್ತ ಎಂಬುದಾಗಿ ಚಾಲ್ತಿಯಲ್ಲಿದೆ. ಇವೆರಡೂ ಪ್ರಯೋಗಗಳನ್ನು ಬಳಸಿಕೊಂಡು ಇನ್ನೊಂದು ಸಮಾಜಮುಖಿ ಅರ್ಥವನ್ನು ಕಂಡುಕೊಳ್ಳುವಲ್ಲಿ ನವೀನ ಪ್ರಯೋಗವೇ ಈ ಚಿತ್ರ ಎಂದು ಭಾವಿಸುತ್ತೇನೆ. ಹಂತ ಹಂತವಾಗಿ ಸಮಸ್ಯೆಗಳು ಹರಡಿಕೊಳ್ಳುತ್ತಾ ಸಾಗುತ್ತವೆ. ಒಟ್ಟಾರೆ, ಶ್ರೀಸಾಮಾನ್ಯನ ದೈನಂದಿನ ಆರ್ಥಿಕ ಬಿಕ್ಕಟ್ಟುಗಳು, ಜಾಗತೀಕರಣ, ಪಾಶ್ಚಿಮಾತ್ಯ ಅಂಧಾನುಕರಣೆ ಮತ್ತು ಜಾತೀಯ ಕಲಹ ಅಥವಾ ಮೂಲಭೂತವಾದ ಎಂಬುದಾಗಿ ವಿಂಗಡಿಸಬಹುದು.

ಶ್ರೀಸಾಮಾನ್ಯನನ್ನು ಆಟೋಚಾಲಕ ಸೀನಪ್ಪ (ರಂಗಾಯಣ ರಘು) ಪ್ರತಿನಿಧಿಸಿದ್ದಾನೆ. ಆಟೋ ಮಾಲೀಕನಿಗೆ ದೈನಂದಿನ ಬಾಡಿಗೆ ನೀಡಲಾಗದೆ ಉದ್ಭವಿಸುವ ಆರ್ಥಿಕ ಸಮಸ್ಯೆ ಕೌಟುಂಬಿಕ ಕಲಹಕ್ಕೆ ಕಾರಣವಾಗುತ್ತದೆ. ಪತ್ನಿ (ಮೇಘ ನಾಡಿಗೇರ್) ಯನ್ನು ಹಿಂಸಿಸುವ, ಮಕ್ಕಳನ್ನು ದೂಷಿಸುವುದರೊಂದಿಗೆ ಅವಸಾನಗೊಳ್ಳುತ್ತದೆ. ಇಲ್ಲಿ ಹಿಂಸೆಯ ವೈಭವೀಕರಣವಾಗಿದೆಯೇನೋ ಎಂದೊಂದು ಕ್ಷಣ ಅನ್ನಿಸಿದರೂ, ಅದೇ ವಾಸ್ತವ ಎನ್ನುವ ಸತ್ಯವನ್ನು ನಾವು ಒಪ್ಪಿಕೊಳ್ಳಲೇ ಬೇಕಾಗುತ್ತದೆ. ಚಿತ್ರ ರೂಪಿಸಿರುವ ಎಳೆಯ ಹಿನ್ನೆಲೆಯಲ್ಲಿ ಇದರ ಸಮರ್ಥನೆ ಸರಿಯಾಗಿ ಮೂಡಿಬಂದಿಲ್ಲವೆನ್ನಬಹುದು. ಹೊರಗಡೆ ತನ್ನ ಸ್ನೇಹಿತರೊಂದಿಗೆ, ವೇಶ್ಯೆಯಾದರೂ ರಾಣಿಯಮ್ಮ (ಅರುಂಧತಿ ಜತ್ಕರ್) ನೊಡನೆ ಶುದ್ಧ ಸ್ನೇಹದಿಂದಿರುವ ಸೀನಪ್ಪ, ಮನೆಗೆ ಬಂದೊಡನೆ ಉಗ್ರಪ್ಪನಾಗುತ್ತಾನೆ. ಏನೋ ನೆವ ತೆಗೆದು ರಂಪ ಮಾಡುತ್ತಾನೆ. ಹೆಂಡತಿಯನ್ನು ಹೊಡೆದು ಹಿಂಸಿಸುತ್ತಾನೆ. ಮಕ್ಕಳು ಮೂಕಪ್ರೇಕ್ಷಕರಾಗುತ್ತಾರೆ (ಸೀನಪ್ಪನ ಮಗ ಶ್ರೀಕಾಂತನ ದು:ಖ, ಅಸಹಾಯಕತೆ, ಹಾಗೂ ಗೊಂದಲಗಳ ನಿರ್ಭಾವುಕ ಅಭಿನಯ ಒಂದು ಕ್ಯಾಚ್). ಇಲ್ಲಿ ಆರ್ಥಿಕ ಬಿಕ್ಕಟ್ಟಿಗಿಂತಲೂ ಸೀನಪ್ಪನ ಮನಸ್ಥಿತಿಯೇ ಸಮಸ್ಯೆಗೆ ಕಾರಣವೇನೋ ಅನಿಸುತ್ತದೆ (ಮತ್ತೊಮ್ಮೆ ಬೀchi ಯವರ ಹುಚ್ಚು-ಹುರುಳಿನ ಹೆಂಡತಿಯನ್ನೇಕೆ ಹೊಡೆಯಬೇಕು? ನೆನಪಾಗುತ್ತದೆ). ನಾಲ್ಕು ಗೋಡೆಗಳ ನಡುವೆ ಇರುವ ಹೆಣ್ಣು, ಹೊರಗೆ ಹೋಗಿ ದುಡಿದುಕೊಂಡು ಬರುವ ಗಂಡನನ್ನೇನು ಪ್ರಶ್ನಿಸುವುದು ಎನ್ನುವ ಹಮ್ಮಿರಬಹುದು. ಅಷ್ಟೆಲ್ಲ ಹಿಂಸೆಯನ್ನು ಅನುಭವಿಸಿದ್ಯಾಗ್ಯೂ, ಮಗಳು "ಅಪ್ಪನ ಜೊತೆ ಟೂ ಬಿಡಮ್ಮ" ಎಂದು ಮುಗ್ಧವಾಗಿ ನುಡಿದಾಗ, "ನನ್ನ ಗಂಡನೊಡನೆಯೇ ಟೂ ಬಿಡಲು ಹೇಳುತ್ತೀಯೇನೆ?" ಎಂದು ಮಗಳಿಗೇ ಹೊಡೆಯುತ್ತಾಳೆ ಸೀನಪ್ಪನ ಹೆಂಡತಿ!! ಎಲ್ಲಿಯವರೆಗೂ, ಗಂಡನ ಎಲ್ಲ ಹಸಿವುಗಳನ್ನು ತೀರಿಸುವುದೇ ತಮ್ಮ ಜೀವನದ ಪರಮೋಚ್ಛ ಕರ್ತವ್ಯವೆಂದು ತಿಳಿದಿರುವ ಹೆಂಗಸರಿರುತ್ತಾರೋ, ಹೆಣ್ಣು ಸಹನಾಮೂರ್ತಿ, ಕ್ಷಮಯಾಧರಿತ್ರೀ ಎಲ್ಲವನ್ನೂ ಸೈರಿಸಿಕೊಂಡು ಹೋಗಬೇಕು ಆಗಲೇ ಸಂಸಾರ ಉಧ್ಧಾರವಾಗುವುದು ಎಂದು ಕಿವಿಯೂದುವವರು ಇರುತ್ತಾರೋ, ಅಲ್ಲಿಯವರೆಗೂ ಈ ನರಕದಿಂದವರಿಗೆ ಬಿಡುಗಡೆಯಿಲ್ಲ.

ಬಾಡಿಗೆ ಆಟೋ ಓಡಿಸುವ ದೈನಂದಿನ ಜಂಜಾಟದಿಂದ ಮುಕ್ತಿ ಪಡೆಯಲು ಸ್ವಂತ ಆಟೋದ ಕಡೆ ಸೀನಪ್ಪನ ಮನಸ್ಸು ವಾಲುತ್ತದೆ (ಬಾಡಿಗೆ ಮನೆಯಲ್ಲಿರುವ ಪ್ರತಿಯೊಬ್ಬರೂ ಸ್ವಂತಕ್ಕೊಂದು ಸೂರು ಮಾಡಿಕೊಳ್ಳಲು ಹಪಹಪಿಸುವಂತೆ!). ಶ್ಯೂರಿಟಿ ಇದ್ದರೆ ಮಾತ್ರ ಸಾಲ ನೀಡುವ ಭಾರತೀಯ ಬ್ಯಾಂಕುಗಳ "ಅರ್ಥ" ವ್ಯವಸ್ಥೆ, ಕೊಡಿಸಿದ ಸಾಲದಲ್ಲಿ "ಪರ್ಸೆ೦ಟೇಜ್" ಕೇಳುವ ನಮ್ಮ ಭ್ರಷ್ಟಾಚಾರ ವ್ಯವಸ್ಥೆಯನ್ನು ಚೆನ್ನಾಗಿ ತೋರಿಸಿದ್ದಾರೆ. ಅಜ್ಜಿಯ ಹೆಸರಿನಲ್ಲಿರುವ ಮನೆಯನ್ನು ಶ್ಯೂರಿಟಿಗಾಗಿ ನೀಡುವಲ್ಲಿನ ತೊಡಕಿನ ಬಗ್ಗೆ ಮುಂದಾಲೋಚಿಸಿ ಮಾತನಾಡುವ ಪತ್ನಿ ಮತ್ತೊಮ್ಮೆ ದೂಷಣೆಗೊಳಗಾಗುತ್ತಾಳೆ! ಶೇಕಡಾ ೧೪ ರಷ್ಟು ಬಡ್ಡಿ, ಸಾಲ ತೀರುವವರೆಗೆ ಬ್ಯಾಂಕಿನವರ ವಶದಲ್ಲಿಯೇ ಆಟೋ ಎನ್ನುವ ನಿಭಂದನೆಗಳ ನಡುವೆಯೂ, ಯಾವುದೇ ದಾಖಲಾತಿಗಳನ್ನು ಕೇಳುವುದಿಲ್ಲ ಎನ್ನುವ ಸಂಗತಿಯೊಂದೇ ಸೀನಪ್ಪನನ್ನು ವಿದೇಶೀ ಬ್ಯಾಂಕಿನ ಸಾಲದ ತೆಕ್ಕೆಗೆ ತಳ್ಳುತ್ತದೆ. "ತಿಮ್ಮಯ್ಯನಿಗೆ ಹಣ ಕಟ್ಟದೆ ಇದ್ರೆ, ಹಣ ಬಿಟ್ಟು ಬರೀ ಆಟೋ ಎತ್ಕೊಂಡು ಹೋಗ್ತಾನ, ಆದ್ರೆ ಈ ಪರದೇಶಿ ಬ್ಯಾಂಕಿನವ್ರು ಆಟೋ ಜೊತಿಗೆ ನಿನ್ನೂ ಎಳ್ಕೊಂಡು ಹೋದ್ರೇನ್ಮಾಡ್ತೀ?" ಎನ್ನುವ ರಾಣಿಯಮ್ಮನ ಮಾತುಗಳು ನಿಜಕ್ಕೂ ಯೋಚನಾರ್ಹವೆನಿಸುತ್ತವೆ. ಲಾಭವಿಲ್ಲದೇ ಯಾರೂ business ಮಾಡುವುದಿಲ್ಲ, ಮಾಡಲಾಗುವುದೂ ಇಲ್ಲ. ನಮಗೆ ಪುಕ್ಕಟೆಯಾಗಿ ಅಥವಾ ಕಡಿಮೆ ದರಕ್ಕೆ ಕೊಡಲು ಅವರು ಮಾಡುತ್ತಿರುವುದೇನೂ ದಾನವಲ್ಲ, ಸೇವೆಯಲ್ಲ; ವ್ಯಾಪಾರ. ಆದ್ದರಿಂದ ಅವರ "*" ಮಾರ್ಕುಗಳನ್ನು ಸರಿಯಾಗಿ "ಅರ್ಥ" ಮಾಡಿಕೊಂಡು ವ್ಯವಹರಿಸುವುದು ಕ್ಷೇಮ. ಸಾಲ ಕೇಳಲು ಬಂದಾಗ, ಕೊಡಿಸುವವ, ಒಮ್ಮೆ ಕಾರ್ಡ್ಸ್, ಮತ್ತೊಮ್ಮೆ ಚದುರಂಗ ಆಡುತ್ತಿರುವುದು ಮಾರ್ಮಿಕವಾಗಿದೆ.

ಸೀನಪ್ಪ ತನ್ನ ಸ್ನೇಹಿತರ ಜೊತೆಯಲ್ಲಿ "ಬಾರ್" ನಲ್ಲಿ ಕುಳಿತು ಕಷ್ಟಸುಖ ಹಂಚಿಕೊಳ್ಳುತ್ತಿರುವಾಗ "ನಾವು ಇಲ್ಲಿರಬಾರದಾಗಿತ್ತು, ಫಾರಿನ್ ನಲ್ಲಿರಬೇಕಾಗಿತ್ತು. ಆರಾಮಾಗಿರಬಹುದಾಗಿತ್ತು" ಅಂದುಕೊಳ್ಳುತ್ತಾರೆ. ಮತ್ತೊಂದು ಸಂದರ್ಭದಲ್ಲಿ "ನಿನ್ನ ಮನೆಯವರ ಜೊತೆ ಫಾರಿನ್ನಾಗೆ ಮಾಡ್ತಾರಂತಲ್ಲ ಹಂಗೆ ವೀಕೆಂಡ್ ಮಾಡು, ನೆಮ್ಮದಿಯಾಗಿರ್ತೀಯ" ಅನ್ನೋ ಸಲಹೆ ಬರುತ್ತದೆ. ಈ ಮಾಹಿತಿ ತಂತ್ರಜ್ಞಾನ ಯುಗದಲ್ಲೂ ನಮ್ಮ ಜನರಲ್ಲಿ "ಫಾರಿನ್" ಕುರಿತಾಗಿ ಇರುವ ತಪ್ಪು ಅಭಿಪ್ರಾಯಗಳನ್ನು ಕುರಿತು ಅಚ್ಚರಿಯಾಗುತ್ತದೆ! ಅಲ್ಲಿಯೂ ಭಿಕ್ಷುಕರಿದ್ದಾರೆ, ಕಳ್ಳರಿದ್ದಾರೆ, ಕೊಲೆಗಾರರಿದ್ದಾರೆ, ಅಕ್ರಮ ನಿವಾಸಿಗಳಿದ್ದಾರೆ, ವಲಸಿಗರಿದ್ದಾರೆ, ಹುಚ್ಚರಿದ್ದಾರೆ! ವರ್ಣಬೇಧದ ಸಣ್ಣ under current ಇನ್ನೂ ಹರಿಯುತ್ತಿದೆ! ಅಲ್ಲಿಯೂ ವಿವಿಧ ಜಾತಿಗಳಿವೆ, ಅಪ್ಪಟ ಲಂಪಟ "ಧರ್ಮ"ಗುರುಗಳಿದ್ದಾರೆ! ಒಂದು ಜಾತಿಯವರು ಇನ್ನೊಂದು ಜಾತಿಯ ಆರಾಧನಾ ಸ್ಥಳಕ್ಕೆ ಹೋಗುವುದಿಲ್ಲ, ಅದೇನೋ ಅಸಡ್ಡೆ, ಅಗೌರವ! ನಾವೆಲ್ಲ ಒಬಾಮನ ದೀಪಾವಳಿ ನೋಡಿ ಮರುಳಾದದ್ದೇ ಹೆಚ್ಚು! ಅದೇಕೋ ನಮ್ಮ ಮಾಧ್ಯಮಗಳಿಗೆ ನಮ್ಮ ಹುಳುಕುಗಳನ್ನು ವೈಭವೀಕರಿಸುವಲ್ಲಿ ಇರುವ ಉತ್ಸುಕತೆ ಅಲ್ಲಿನ ಮಾಧ್ಯಮಗಳಲ್ಲಿಲ್ಲ. ಅದೇಕೋ ನಮ್ಮ ಜನಕ್ಕೆ ಆದಾಯ ಡಾಲರುಗಳಲ್ಲಿರುವುದು ಕಾಣುತ್ತದೆಯೇ ಹೊರತು ವೆಚ್ಚವೂ ಡಾಲರ್ ಗಳಲ್ಲಿಯೇ ಎನ್ನುವುದು ಕಾಣುವುದಿಲ್ಲ! ಅಲ್ಲಿ ಹೋಗಿ ಪೆಟ್ರೋಲ್ ಬಂಕುಗಳಲ್ಲಿ, ಮಾಲ್ ಗಳ ರೆಸ್ಟ್ ರೂಮ್ ಗಳಲ್ಲಿ ಕ್ಲೀನರ್ ಗಳಾಗಿ ಕೆಲಸಮಾಡಿದರೂ ಸರಿಯೇ, ಫಾರಿನ್ ಕೆಲಸವೇ ಆಗಬೇಕು! ಅದೇ ಕೆಲಸ ಇಲ್ಲಿ ಮಾಡಿದರೆ, dignity of labour! ಅದೇಕೋ ಅಲ್ಲಿನ ಐಷಾರಾಮ ಜೀವನವನ್ನು ನೋಡುವ ನಾವು, ಅಲ್ಲಿನ ಶಿಸ್ತು ಶುಚಿತ್ವವನ್ನು, ಗಂಡ ಹೆಂಡತಿಯನ್ನು ವಿನಾಕಾರಣ ಹೊಡೆಯುವುದಿಲ್ಲ ಎನ್ನುವುದನ್ನು, ದಂಪತಿಗಳು ಮಕ್ಕಳ ಮುಂದೆ ಜಗಳವಾಡುವುದಿಲ್ಲ ಎನ್ನುವುದನ್ನು, ವೃತ್ತಿ-ಸಂಸಾರವನ್ನು ಬೆರೆಸಿ ಕಿಚಡಿಯನ್ನು ಅವರು ಮಾಡುವುದಿಲ್ಲ ಎನ್ನುವುದನ್ನು ನಾವು ಗಮನಿಸುವುದೇ ಇಲ್ಲ! ಇಷ್ಟೆಲ್ಲದರ ನಡುವೆಯೂ ಮನೆಯವರೊಡನೆ ಸಮಯ ಕಳೆಯಬೇಕೆಂಬುದನ್ನು ಪಾಶ್ಚಿಮಾತ್ಯರ ವೀಕೆಂಡೇ ನಮಗೆ ಕಲಿಸಬೇಕಾಯಿತೇ? ವಿಪರ್ಯಾಸ!!

ಮನೆಯಲ್ಲಿ ದಿನನಿತ್ಯ ನಡೆಯುವ ಪ್ರಹಸನದಿಂದ ದೂರವಾಗಲು, ಜಂಜಡಗಳಿಂದ ಬಿಡಿಸಿಕೊಳ್ಳಲು, ಹೊತ್ತು ಕಳೆಯಲು, ಸೀನಪ್ಪನ ಮಗ ಶ್ರೀಕಾಂತ ಯಾವುದೋ ಮೂಲಭೂತವಾದಿ ಸಂಘಟನೆಗೆ ಸೇರಿರುತ್ತಾನೆ. ಅಲ್ಲಿನ ವಿಚಾರಗಳಿಂದ ಪ್ರಭಾವಿತನಾಗಿ ಅಪ್ಪನ ವಿದೇಶಿ ಆಚರಣೆಗಳ ವಿರುಧ್ಧ ಮಾತನಾಡುತ್ತಾನೆ; ರಾಣಿಯಮ್ಮನನ್ನು ಬದಲಾಯಿಸುತ್ತಾನೆ. ಮಹಾನ್ ದೇಶಭಕ್ತ, ಕ್ರಾಂತಿಕಾರಿ ನಾಯಕ, ಸಂಸ್ಕೃತಿಯ ಪರಿಪಾಲಕನಂತೆ ತಂದೆಗೆ ಕಾಣುತ್ತಾನೆ. ಮಗ ಹೇಳಿದ್ದು ಅರ್ಥವಾಗಲಿಲ್ಲ ಎಂಬ ಕಾರಣಕ್ಕಾಗಿಯೇ ಮಗ ಏನನ್ನೋ ಮಹತ್ತರವಾದದ್ದನ್ನು ಹೇಳುತ್ತಿದ್ದಾನೆ ಎಂದುಕೊಳ್ಳುವ ಸೀನಪ್ಪನಲ್ಲಿ ನಿಜವಾದ ಅರ್ಥದಲ್ಲಿ ಮುಗ್ಧ ಶ್ರೀಸಾಮಾನ್ಯ ಪ್ರತಿಬಿಂಬಿಸುತ್ತಾನೆ. ಒಂದೊಮ್ಮೆ, ಮಗ ಡ್ರಗ್ಸ್ ಎನ್ನುವ ದುಶ್ಚಟಕ್ಕೆಲ್ಲಿ ಬಲಿಯಾಗುವನೋ ಎಂದು ಕಳವಳಪಟ್ಟು ಅವುಗಳಿಂದ ದೂರವಿರಲು ತಾಕೀತು ಮಾಡುವ ಸೀನಪ್ಪನಿಗೆ, ಈಗ ಮಗನಿಗಂಟಿಕೊಂಡಿರುವ "ಚಟ" ಯಾವುದೇ ಗಾಂಜಾ, ಅಫೀಮಿಗಿಂತಲೂ ಅಪಾಯಕಾರಿ ಎನ್ನುವುದು ಗೊತ್ತಾಗುವುದೇ ಇಲ್ಲ. ಅದು ಆತನನ್ನಷ್ಟೇ ಅಲ್ಲ, ಅನೇಕಾನೇಕ ಅಮಾಯಕರನ್ನೂ, ಸಮಾಜದ ಸ್ವಾಸ್ಥ್ಯವನ್ನೂ ಬಲಿತೆಗೆದುಕೊಳ್ಳುತ್ತದೆ ಎಂಬುದು "ಅರ್ಥ"ವಾಗುವುದೇ ಇಲ್ಲ. ಕಾಡುವ ವಿಷಯವೆಂದರೆ, ಯಾವನೋ ತಲೆಮಾಸಿದವನ ಹಳಸಲು ಆದರ್ಶಗಳಿಗೆ, ಕೊಳೆತ ಸಿಧ್ಧಾಂತಗಳಿಗೆ, ಕೆಟ್ಟ ರಾಜಕೀಯಕ್ಕೆ ಇರುವ ಪ್ರಭಾವ, ಶಾಂತಿ ನೆಮ್ಮದಿಯ ಸಮಾಜವನ್ನು ಬಯಸುವ ಸಾಮಾನ್ಯರ ಆಲೋಚನೆಗಳಿಗಿಲ್ಲವಲ್ಲ! ಸಾಮಾನ್ಯ ಜನರಲ್ಲಿರುವ ಜಾತಿ ಪಂಗಡಗಳನ್ನು ಮೀರಿದ ಸ್ನೇಹ ಪ್ರೀತ್ಯಾದರಗಳು ಅದೇಕೋ "ಬುಧ್ಧಿವಂತ" ಜನರಲ್ಲಿ ಕಾಣೆಯಾಗಿವೆ! ಇಷ್ಟಾದರೂ ಅಂತದೊಂದು ಪ್ರಭಾವಳಿಗೆ ಬಲಿಯಾಗುವವರು ಸಾಮಾನ್ಯರೇ! ಸ್ವಾತಂತ್ರ್ಯದ ಜೊತೆಜೊತೆಗೆ ಬಂದ ದೇಶವಿಭಜನೆಯ ಗಲಭೆಯಿಂದ ಪ್ರಾರಂಭವಾಗಿ, ಸಿಖ್ ಹತ್ಯಾಕಾಂಡ, ಅಯೋಧ್ಯಾ ವಿವಾದ, ಗೋಧ್ರಾ ಪ್ರಕರಣ, ಈದ್ಗಾ ಪ್ರಕರಣ..... ಇಲ್ಲೆಲ್ಲೂ ಯಾವೊಬ್ಬ ನಾಯಕನ ಒಂದು ಕೂದಲೂ ಕದಲಲಿಲ್ಲ. ಬಲಿಯಾದವರೆಲ್ಲ ಶ್ರೀಸಾಮಾನ್ಯರು! ಇಂತದೊಂದು ಸಂದೇಶ, ಚಿತ್ರದಲ್ಲಿ ಸೀನಪ್ಪನ ಮಗ ಹಾಗೂ ಮುಸ್ಲಿಂ ಸ್ನೇಹಿತ ಕೋಮುಗಲಭೆಯಲ್ಲಿ ಸತ್ತಾಗ ಬಹಳ ಪರಿಣಾಮಕಾರಿಯಾಗಿ ಮೂಡಿಬಂದಿದೆ. ದೇಶದ ಅರ್ಥವ್ಯವಸ್ಥೆಗೊಂದು ಹೊಸದಿಕ್ಕನ್ನು ತೋರಿಸಬೇಕಾಗಿರುವ ದೇಶೀಯತೆ ಎನ್ನುವುದು ಮೂಲಭೂತವಾದಿಗಳ ಹಾಗೂ ಜ್ಯಾತ್ಯಾತೀತವಾದಿಗಳ ನಡುವೆ ಅಪಭ್ರಂಶುವಾಗಿ ನಲುಗುತ್ತಿರುವುದು ನಿಜಕ್ಕೂ ದುರಂತ...

ಅರ್ಥಕ್ಕೊಂದು ಹೊಸ ಅರ್ಥ ಕೊಡುವಲ್ಲಿ ಚಿತ್ರ ಸಾರ್ಥಕತೆ ಪಡೆದಿದೆ. ನಡುನಡುವೆ ಬರುವ ವಚನಗಳು, ನಾಗೇಂದ್ರ ಶಾ ರವರ ಚುಟುಕುಗಳು ಸರಿಯಾಗಿ ಕುಟುಕುತ್ತವೆ. ಆ ಪಾತ್ರವಂತೂ ನಿಜಕ್ಕೂ a treat to watch. ಕೊನೆಯಲ್ಲಿ, ಕೋಮುಗಲಭೆಯ ದಳ್ಳುರಿಯಲ್ಲಿ ಸೀನಪ್ಪನ ಆಟೋ, ವಿದೇಶಿ ಬ್ಯಾಂಕಿನ ಎತ್ತರದ ಹೋರ್ಡಿ೦ಗ್ ನ ಕೆಳಗೆ ಹತ್ತಿ ಉರಿಯುತ್ತಿರುತ್ತದೆ. "ಮನೆಯೊಳಗೆ ಕತ್ತಲಾಗಿದೆ ದೀಪ ಹಚ್ರೋ" ಎಂದು ಅಜ್ಜಿ ನುಡಿಯುತ್ತಾರೆ. ಎಷ್ಟು ಅರ್ಥಪೂರ್ಣವಾಗಿದೆಯಲ್ಲವೇ?

Friday, October 09, 2009

ಕಾಡದಿರಿ ನೆನಪುಗಳೇ....!


ಬೆಳಗಿನ ಜಾವದ ಚುಮುಚುಮು ಚಳಿಯಲ್ಲಿ ಬಣ್ಣ ಬಣ್ಣದ ಬಟ್ಟೆ ತೊಟ್ಟು, ಅಪ್ಪನ ಕೈಯನ್ನೋ ಅಮ್ಮನ ಕೈಯನ್ನೋ ಹಿಡಿದುಕೊಂಡು ಶಾಲೆಗೆ ಹೋಗುತ್ತಿರುವ ಆ ಮುದ್ದು ಮಕ್ಕಳನ್ನು ಕಂಡಾಗ ನಮ್ಮ ಬಾಲ್ಯದಂಗಳಕ್ಕೆ ಕರೆದೊಯ್ಯುತ್ತೀರಿ. ಬಸ್ ಸ್ಟಾಂಡ್ ನಲ್ಲಿ ಲೈಟ್ ಕಂಬ ಹಿಡಿದು ಸುತ್ತುತ್ತಿರುವ ಆ ಅಣ್ಣತಂಗಿಯನ್ನು ಕಂಡಾಗ, ಅಕ್ಕನ ಕೈಯಲ್ಲಿನ ಚಾಕಲೇಟೇ ಬೇಕು ಎಂದು ಅಳುತ್ತಿರುವ ತಂಗಿಯನ್ನು ಕಂಡಾಗ ನಮ್ಮ ಕದನಗಳ ರಣಭೂಮಿಗೆ ಹೊತ್ತೊಯ್ಯುತ್ತೀರಿ. ಅಲ್ಲೆಲ್ಲೋ ಕೆಫೆಯೊಂದರಲ್ಲಿ ಹರಟುತ್ತಿರುವ ಯುವಕ ಯುವತಿಯರನ್ನು ಕಂಡಾಗ ನಮ್ಮ ಕಾಲೇಜಿನ ಆವರಣದಲ್ಲೇ ಇಳಿಸುತ್ತೀರಿ. ಪ್ರೀತಿಪಾತ್ರರಿಂದ ದೂರವಾಗಿ ನೆಲೆಸಿ ನಡೆಯುತಿರಲು ಧುತ್ತೆಂದು ಧಾಳಿ ಮಾಡುತ್ತೀರಿ. ಖಿನ್ನತೆಯನ್ನು ಜೊತೆಗೂಡಿಸುತ್ತೀರಿ. ಆಸಕ್ತಿಯನ್ನು ಕಳೆದುಬಿಡುತ್ತೀರಿ. ಏಕೆ ಹೀಗೆ ಕಾಡುತ್ತೀರಿ? ಬಿಟ್ಟುಕೊಡಿ ಇಂದಿನ ಈ ಹೊತ್ತನ್ನು ಇಂದಿನ ಈ ಹೊತ್ತಿಗೆ. ಬಿಟ್ಟುಬಿಡಿ ಸವಿಯಲು ಈಗ ಕಾಣುತ್ತಿರುವ ಆ ಮಕ್ಕಳ ಮುಗ್ಧತೆಯನ್ನು, ಸೋದರವಾತ್ಸಲ್ಯವನ್ನು, ಹುಡುಗರ ಹುಡುಗಾಟಿಕೆಯನ್ನು. ದಾರಿಮಾಡಿಕೊಡಿ ಹೊಸನೆನಪುಗಳಿಗೆ. ತೆರೆದುಕೊಳ್ಳಲು ಬಿಡಿ ಹೊಸ ಅನುಭವಗಳಿಗೆ.....

ಎಲ್ಲ ಮರೆತಿರುವಾಗ ಇಲ್ಲ ಸಲ್ಲದ ನೆವವ
ಹೂಡಿ ಬರದಿರು ಮತ್ತೇ ಹಳೆಯ ನೆನಪೇ
ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ
ರಾಡಿಗೊಳಿಸುವೆಯೇಕೆ ಮಧುರ ನೆನಪೇ

ಕಾಲನ ಕೆಲಸವೇ ಅದು. ಯಾರ ಹಂಗೂ ಇಲ್ಲದೆ ಮುಂದೆ ಸಾಗುತ್ತಿರುತ್ತಾನೆ. ದಿನ, ವಾರ, ತಿಂಗಳುಗಳನ್ನು ಹೊತ್ತು ತರುತ್ತಾನೆಯೇ ಹೊರತು ವಸಂತಗಳನ್ನಲ್ಲ. ಆದರೆ ನೀವು ಕಾಲನನ್ನೇ ಮೀರಿದವರು. ಕ್ಷಣಮಾತ್ರದಲ್ಲೇ ಎಷ್ಟು ಏಡುಗಳನ್ನಾದರೂ ಎಣಿಸಿಬಿಡುತ್ತೀರಿ! ಓಡುತ್ತಿರುವ ಕಾಲನೊಂದಿಗೆ ಎಷ್ಟೇ ವೇಗವಾಗಿ ಓಡಿದರೂ ಕಟ್ಟಿಬಿಡುತ್ತೀರಲ್ಲ ಹರಿವಿಗೊಂದು ತಡೆಯನ್ನು! ಮರೆಯಬೇಕೆಂದಿರುವ ಘಟನೆಗಳನ್ನೇ ಬುನಾದಿಯಾಗಿಸಿ, ವ್ಯಕ್ತಿಗಳನ್ನೇ ಕೂಲಿಗಳನ್ನಾಗಿಸಿ ನಿಮ್ಮ ಭದ್ರಕೋಟೆಯನ್ನು ಕಟ್ಟುತ್ತೀರಿ. ಕಾಲಗತಿಯಲ್ಲಿ ಅಳಿಸಿಹೋಗಬಹುದಾದ ಸಾಧ್ಯತೆಯನ್ನೇ ಅಳಿಸಿಹಾಕುತ್ತೀರಿ.

ಕಪ್ಪುಕಣ್ಣಿನ ದಿಟ್ಟ ನೋಟದರೆಚಣವನ್ನೆ
ತೊಟ್ಟಬಾಣದ ಹಾಗೆ ಬಾರದಿರು ನೆನಪೇ
ಬಿರಿದ ತುಟಿಗಳ ತುಂಬು ನಗೆಯ ಕಾರಣವನ್ನೆ
ಇರಿದು ಕೊಲ್ಲಲು ಬಳಿಗೆ ಸಾರದಿರು ನೆನಪೇ

ಪಯಣದಲ್ಲೂ, ಏಕಾಂತದಲ್ಲೂ, ಕಣ್ಣುಮುಚ್ಚಿದರೂ, ತೆರೆದರೂ, ಮಗ್ಗಲು ಬದಲಿಸಿದರೂ ನೀವೇ ಇರುತ್ತೀರಿ. ಕನಸುಗಳು ಕಣ್ಮರೆಯಾಗಿವೆ. ಕಣ್ಣೀರು ಇಂಗಿ ಹೋಗಿದೆ. ಜೀವನದಲ್ಲಿಯ ಜೀವ ಕಳೆದುಹೋಗೆ, ಕೇವಲ ನಕಾರ ಉಳಿದುಕೊಂಡಿದೆ. ಎದೆ, ತನ್ನ ಗೂಡೇ ಒಡೆದುಹೋಗುತ್ತದೇನೋ ಎನ್ನುವಂತೆ, ಹೃದಯ, ತನ್ನ ಕವಾಟವೇ ಬಿರಿದುಹೋಗುತ್ತದೇನೋ ಎನ್ನುವಂತೆ ಚೀರುತ್ತಿದೆ ನಿಮ್ಮ ಬೇಡಿಯಿಂದ ಬಿಡಿಸಿಕೊಳ್ಳಲು. ಎಲ್ಲಿಯವರೆಗೆ ಕಾಡುತ್ತೀರಿ? ಎಲ್ಲಿಯವರೆಗೆ ನಿಮ್ಮ ಬಂಧನದ ಬೇಲಿಯೊಳಗೆ ಬದುಕನ್ನು ಬಂಧಿಸಿಡುತ್ತೀರಿ? ಮೈಕೊಡವಿ ನಿಮ್ಮಿಂದ ಬಿಡಿಸಿಕೊಂಡರೂ ಕೊನೆಗೆ ಸಿಗುವುದೇನು? ಗತಿಸಿಹೋದ ಗೆಳೆಯರ, ಮುರಿದುಹೋದ ಸಂಬಂಧಗಳ, ಕಳೆದು ಹೋದ ವಿಶ್ವಾಸದ, ನಶಿಸಿ ಹೋದ ನಂಬಿಕೆಯ, ವ್ಯರ್ಥವಾದ ಸಮಯದ ಕುರಿತಾದ ಒಂದು ನಿಡಿದಾದ ಉಸಿರು, ಕೊನೆಯದೇನೋ ಎಂಬಂತೆ ಕಣ್ಣಂಚಿನಲ್ಲಿ ಕೂತಿರುವ ಆ ನೀರ ಬಿಂದು... ...

ಸತ್ತ ಭೂತವನೆತ್ತಿ ಹದ್ದಿನಂದದಿ ತಂದು
ನನ್ನ ಮನದಂಗಳಕೆ ಹಾಕದಿರು ನೆನಪೇ
ಭವ್ಯ ಭವಿತವ್ಯಕ್ಕೆ ಮೊಗ ಮಾಡಿ ನಿಂತಿರುವೆ
ಬೆನ್ನಲ್ಲಿ ಇರಿಯದಿರು ಓ! ಚೆಂದ ನೆನಪೇ

ಹೊಸ ಕನಸುಗಳನ್ನು ಹೆಣೆಯಲು ಹವಣಿಸುತ್ತಿರುವಾಗ, ಹಳೆಯ ಛಿದ್ರಗೊಂಡ ಕನಸುಗಳ ಗೋರಿಯಿಂದ ಭಯವನ್ನೆತ್ತಿ ತರುತ್ತೀರಿ. ಹೊಸ ಗುರಿಯ ಹೊಸೆಯುತ್ತಿರಲು, ಹಿಂದೊಮ್ಮೆ ಗುರಿ ತಲುಪಿದ ಸಂಭ್ರಮದಲ್ಲಿ ಬುಡವೇ ಕಳಚಿಬಿದ್ದ ಅನುಭವಗಳ ಹೊತ್ತು ತರುತ್ತೀರಿ. ಕನಸುಗಳಿಲ್ಲದೆ ನಿದ್ದೆ ನಿರ್ವಿಣ್ಣವಾಗಿದೆ. ಗುರಿಯೊಂದು ಕಾಣದೆ ಹಾದಿ ಗೆದ್ದಲು ಹಿಡಿದಿದೆ. ಭವಿಷ್ಯವನ್ನು ನಿರ್ಧರಿಸಲಾಗದೆ, ಗತವನ್ನು ಬದಲಿಸಲಾಗದೆ ಜೀಕುತ್ತಿರುವ ಜೀವನ ಜಡ್ಡುಹಿಡಿದಿದೆ. ಬದುಕು ನಿಮ್ಮ ಸುಳಿಯಲ್ಲೇ ಸುತ್ತಿ ಸುತ್ತಿ ಸ್ಮಶಾನ ಸೇರುವ ಮೊದಲು ಅದನ್ನು ಮುಕ್ತಗೊಳಿಸಿ. ಬಾಳು ಪುನರುಜ್ಜೀವನಗೊಳ್ಳಲಿ ನವಚೈತನ್ಯದೊಂದಿಗೆ, ಸಾಗಲಿ ಹೊಸದಿಗಂತದೆಡೆಗೆ....

[ಕವನ: ಡಾ.ನಿಸಾರ್ ಅಹಮದ್]
[ಚಿತ್ರ: ಪಾಲಚಂದ್ರ]
[ಹಾಡನ್ನು ಇಲ್ಲಿ ಕೇಳಿ]

Wednesday, August 12, 2009

ಮಳೆಗಾಲದೊಂದು ರಾತ್ರಿ....

ಮಳೆಗಾಲದ ಒಂದು ರಾತ್ರಿ. ಕಛೇರಿಯಲ್ಲಿ ಕೆಲಸ ಮುಗಿದಿತ್ತು. ಮನೆಗೆ ಹೋಗಲೆಂದು ಬಸ್ ಹಿಡಿಯಲು ಹೊರಗೆ ಬಂದೆ. ಮಳೆ ಜಿನುಗುತಿತ್ತು. ಛತ್ರಿ ತಂದಿರಲಿಲ್ಲ (ನೀನೇ ದೊಡ್ಡ ಛತ್ರಿ ಅಂತೀರಾ? ಹಳೇ ಜೋಕು ರೀ!). ಅದೇನೋ ನನ್ನ ಛತ್ರಿಗೂ ಮಳೆಗೂ ಆಗಿ ಬಂದಿಲ್ಲ. ನಾನು ಛತ್ರಿ ತಂದಾಗೆಲ್ಲ ಮಳೆನೇ ಬರುವುದಿಲ್ಲ. ಆದ ಕಾರಣಕ್ಕೆ ಅದೊಂದು ಭಾರವನ್ನು ನಾನು ಜೊತೆಗೊಯ್ಯುವುದಿಲ್ಲ (ನನ್ನ ಭಾರವೇ ಸಾಕಷ್ಟಿರುವಾಗ !!). ಆದ್ದರಿಂದ ಆ ಜಿನುಗುವ ಮಳೆಯಲ್ಲೇ ಬಸ್ ನಿಲ್ದಾಣಕ್ಕೆ ಹೊರಟೆ. ಅಲ್ಲೂ ದುರಾದೃಷ್ಟ ನನ್ನ ಬೆನ್ನು ಬಿಡಲಿಲ್ಲ. ಮಧ್ಯ ಹಾದಿಯಲ್ಲೇ ವರುಣನ (ಅವ)ಕೃಪೆಗೆ ಪಾತ್ರವಾದೆ. ಧೋ ಎಂದು ಒಮ್ಮೆಗೆ ಮಳೆರಾಯನ ಆರ್ಭಟ. ನಿಲ್ಲಲೊಂದು ಸೂರು ಕಾಣಲಿಲ್ಲ. ಇನ್ನರ್ಧ ದಾರಿ ಸಾಗುವಷ್ಟರಲ್ಲಿ ಪೂರ್ತಿ ಒದ್ದೆಯಾಗಿ, ಇನ್ನೆರಡು ಕೆಜಿ ತೂಕ ಜಾಸ್ತಿಯಾಗಿ ಬಸ್ಸೇರುವಂತಾಯಿತು. ನಂತರ ಬಂದವರ ಸ್ಥಿತಿಯೇನು ಭಿನ್ನವಾಗಿರಲಿಲ್ಲ. ಯಾಕೆಂದರೆ ಮಳೆ ನಿಂತಿರಲಿಲ್ಲ. ನಿಲ್ಲುವ ಸೂಚನೆಯೂ ಇರಲಿಲ್ಲ.

ಚಳಿಗೆ ನಡುಗುತಿದ್ದ ಆ ದೇಹಗಳನ್ನೇ ಹೊತ್ತು ಬಸ್ಸು ಹೊರಟಿತು. ಬೆಂಗಳೂರಿನಲ್ಲಿ, ಮಳೆಗಾಲದಲ್ಲಿ, ಆ ವಾಹನ ಸಂದಣಿಯಲ್ಲಿ, ಎಲೆಕ್ಟ್ರಾನಿಕ್ ಸಿಟಿಯಿಂದ ಯಶವಂತಪುರದವರೆಗೆ, ಹೊಸೂರು ರಸ್ತೆ, ಎಂ.ಜಿ. ರಸ್ತೆಗಳನ್ನು ದಾಟಿ ಹೋಗಬೇಕು. ಪಯಣಿಗರ ಸ್ಥಿತಿ ಊಹೆಗೆ ಬಿಟ್ಟಿದ್ದು. ಕಾಲಹರಣವಾದರೂ ಹೇಗೆ? ಪುಸ್ತಕ ಓದುವ ಸ್ಥಿತಿಯಲ್ಲಿರಲಿಲ್ಲ. ಹಾಗೇ ಕಿಟಕಿಯಿಂದಾಚೆ ನೋಡುತ್ತಾ ಕುಳಿತೆ. ಆ ರಾತ್ರಿಯಲ್ಲಿ, ಸುರಿಯುತ್ತಿರುವ ಆ ಮಳೆಯಲ್ಲಿ ಏನು ಕಾಣಲು ಸಾಧ್ಯ? ರಸ್ತೆಯಲ್ಲಿ ತುಂಬಿದ್ದ ನೀರು, ಹುಯ್ಯುತ್ತಿರುವ ಮಳೆ.

ಮನಸ್ಸು ಹಳೆಯ ನೆನಪುಗಳ ಹಾದಿ ಹಿಡಿಯಿತು. ಬಾಲ್ಯಕ್ಕೋಡಿತು. ತೀರ್ಥಹಳ್ಳಿಗೆ. ಹೌದು, ಕುವೆಂಪು, ಹಾ.ಮಾ.ನಾಯಕ್, ಪೂರ್ಣ ಚಂದ್ರ ತೇಜಸ್ವಿ, ಎಂ.ಕೆ.ಇ೦ದಿರಾ ಇವರೇ ಮೊದಲಾದ ಸಾಹಿತ್ಯ ಭೀಮರನ್ನು ನಾಡಿಗೆ ನೀಡಿದ ಅದೇ ಶಿವಮೊಗ್ಗೆಯ ತೀರ್ಥಹಳ್ಳಿ.

ಮಲೆನಾಡಿನ ಮಳೆಯೆಂದರೆ ಬರೀ ಮಳೆಯೆ. ಅನುಭವಿಸಿಯೇ ತೀರಬೇಕು ಅದರ ಸೊಬಗನ್ನ. ದಿನದ ಯಾವ ಹೊತ್ತಿನಲ್ಲಿಯೂ ಸೂರ್ಯ ಕಾಣುವಂತೆಯೇ ಇಲ್ಲ. ಸದಾ ಆ ಕಪ್ಪು ಮೋಡಗಳ ನಡುವೆಯೇ ಅವಿತಿರುತ್ತಿದ್ದ. ಮೇ ತಿಂಗಳಿಗೆಲ್ಲ ಆರಂಭವಾಗಿಬಿಡುವ ಮಳೆ, ಸಪ್ಟೆಂಬರ್ - ಅಕ್ಟೋಬರ್ ನ ವರೆಗೂ ಇರುತ್ತಿತ್ತು. ಆ ನಾಲ್ಕೈದು ತಿಂಗಳು ಬಿಸಿಲೆಂಬುದು ಮರೀಚಿಕೆ. ಬಟ್ಟೆಗಳು ಒಣಗಿವೆಯೆಂದು ಒಳಗೆ ತಂದ ಜ್ಞಾಪಕವೇ ಇಲ್ಲ.

ಶಾಲೆಗಳು ಶುರುವಾಗುತ್ತಿದ್ದುದೇ ಮಳೆಗಾಲದಲ್ಲಿ (ಜೂನ್). ಮಳೆಯಲ್ಲಿ ಶಾಲೆಗೆ ಹೋಗುವುದೇ ಒಂದು ಮಜ. ಆ ದೊಡ್ಡ ದೊಡ್ಡ ಛತ್ರಿಗಳಡಿಯಲ್ಲಿ, ಗಾಳಿಯ ದಿಕ್ಕನ್ನನುಸರಿಸಿ ಛತ್ರಿಯನ್ನಾಡಿಸುತ್ತಾ, ನಿಂತ ನೀರಲ್ಲಿ ಕುಪ್ಪಳಿಸುತ್ತಾ, ಗೆಳೆಯ/ಗೆಳತಿಯರೊಂದಿಗೆ ಹರಟುತ್ತಾ ಸಾಗಿದರೆ ಸುಮಾರು ೩ ಕಿಲೊಮೀಟರುಗಳ ದಾರಿ ಸವೆದದ್ದೇ ತಿಳಿಯುತ್ತಿರಲಿಲ್ಲ.

ಬೆಳಿಗ್ಗೆ ಅಮ್ಮನ ಕೈಯ ಬಿಸಿ ಬಿಸಿ ತಿಂಡಿ ತಿಂದು ಬರುವಷ್ಟರಲ್ಲಿ, ಅಪ್ಪ ರೈನ್ ಕೋಟ್, ಮಳೆಗಾಲದ ಚಪ್ಪಲಿ (ಹೌದು, ಪ್ರತಿ ಮಳೆಗಾಲಕ್ಕೊಂದು ಸ್ಪೆಶಲ್ ಚಪ್ಪಲಿ), ಸ್ಕೂಲ್ ಬ್ಯಾಗ್ ಎಲ್ಲಾ ಸಿದ್ಧವಾಗಿರಿಸಿಕೊಂಡು, ತಾವೂ ಸಿದ್ಧರಾಗಿ, ಕರೆದೊಯ್ಯಲು ತಯಾರಾಗಿರುತ್ತಿದ್ದರು. ದಾರಿಯಲ್ಲಿ ಒಂದು ನಿಮಿಷ ಸುಮ್ಮನಿದ್ದ ಜ್ಞಾಪಕವಿಲ್ಲ. ಅದೇನೇನೊ ಪ್ರಶ್ನೆಗಳು. ಒಟ್ಟಿನಲ್ಲಿ ನಮ್ಮಪ್ಪನ ಜಿಕೆ ಟೆಸ್ಟ್. ತಂದೆಯವರೊ ಫಸ್ಟ್ ಕ್ಲಾಸ್ ನಲ್ಲಿ ಪಾಸ್. ಸಂಜೆ ತಾಯಿಯೊಡನೆ ಹಿಂದಿರುಗುವಾಗ ವರದಿಗಾರ್ತಿಯ ಕೆಲಸ. ದಾರಿಯುದ್ದಕ್ಕೂ ಆ ದಿನ ಶಾಲೆಯ ಆಗುಹೋಗುಗಳ ಸಂಪೂರ್ಣ ವರದಿ.

ಪ್ರತಿವರ್ಷವೂ ಶಾಲೆ ಶುರುವಾದ ಮೊದಲ ದಿನ, ನೋಟ್ ಪುಸ್ತಕಗಳ ಪಟ್ಟಿ ಮನೆಗೆ ಬರುತ್ತಿತ್ತು. (ಪಠ್ಯಪುಸ್ತಕಗಳು ನಮ್ಮ ಹಿರೀಕರಿ೦ದ ಬೇಸಿಗೆ ರಜೆಯಲ್ಲೇ ಬಂದಿರುತ್ತಿದ್ದವು. ತಂದೆಯವರ ದೆಸೆಯಿಂದ ಅರ್ಧ ಓದಿ ಮುಗಿಸಿಯೂ ಆಗಿರುತ್ತಿತ್ತೆನ್ನಿ). ಅಂದು ಸಂಜೆಯೇ ಪುಸ್ತಕಗಳನ್ನು ತಂದು ಅವುಗಳಿಗೆ ಬೈಂಡ್ ಹಾಕುವ ಕೆಲಸ. ಮೊದಲು ಪೇಪರ್ ಬೈಂಡ್ ಹಾಕಿ ಅದರ ಮೇಲೆ ಪ್ಲಾಸ್ಟಿಕ್ ಬೈಂಡ್ ಹಾಕಿ ಕೊಡುತ್ತಿದ್ದರು. ಮಳೆಗೆ ಪುಸ್ತಕಗಳು ನೆನೆಯಬಾರದಲ್ಲ, ಅದಕ್ಕೆ. ನಮಗೇನಾದರೂ ಪರವಾಗಿಲ್ಲ, ಆದರೆ ಪುಸ್ತಕಗಳನ್ನು ಹಾಳು ಮಾಡಿದರೆ ಮಾತ್ರ ತಂದೆಯವರ ಕೋಪಕ್ಕೆ ಗುರಿಯಾಗಬೇಕಿತ್ತು. ಇಂದೇನಾದರು ನನಗೆ ಪುಸ್ತಕಗಳ ಮಹತ್ವ ತಿಳಿದಿದೆಯೆಂದರೆ ಅದಕ್ಕೆ ಅವರ ಆ ಪುಸ್ತಕ ಭಕ್ತಿಯೆ ಕಾರಣ. ಅದಕ್ಕಾಗಿ ತಂದೆಯವರಿಗೆ ನಾ ಋಣಿ.

ನಮ್ಮ ಮನೆಯ ಹಿಂದೆಯೇ ಒಂದು ಕೆರೆಯಿತ್ತು. ಅದರಿಂದಲೇ ನಮ್ಮ ಮನೆ ಬೀದಿಯನ್ನು "ಶೀಬಿನಕೆರೆ" ಅಂತ ಕರೀತಿದ್ರು ಅನಿಸುತ್ತೆ. ದಿನವೂ ಆ ಕೆರೆದಂಡೆಯಲ್ಲಿಯೇ ನಡೆದು ಶಾಲೆಗೆ ಹೋಗಬೇಕು. ಆ ಕೆರೆಯ ಮಧ್ಯದಲ್ಲಿ ೨/೩ ಬಂಡೆಗಳಿದ್ದವು. ದಿನವೂ ಆ ಬಂಡೆಗಳು ಎಷ್ಟು ಮುಳುಗಿದವು ಎಂದು ಲೆಕ್ಕ ಹಾಕುವುದೇ ಒಂದು ಆಟ. ಕೆರೆದಂಡೆಯಲ್ಲೂ ಕೆಲವು ಗುರುತುಗಳಿದ್ದವು. ಲೈಟ್ ಕಂಬ, ಪಕ್ಕದ ಗದ್ದೆಗಳಿಗೆ ನೀರು ಹಾಯಿಸುವುದಕ್ಕೆಂದು ಏತ ಮಾದರಿಯಲ್ಲಿ ಕಟ್ಟಿದ್ದ ಕಟ್ಟೆ - ಕಾಲುವೆ ಇತ್ಯಾದಿ. ನೀರಿನ ಮಟ್ಟ ಎಷ್ಟಿದೆ ಎಂದು ಇವುಗಳನ್ನೆಲ್ಲ ನೋಡಿ ಹೇಳುವುದು; ಬಂಡೆ ಮುಳುಗಿತು, ಲೈಟ್ ಕಂಬದ ಹತ್ತಿರ ಬಂದಿದೆ.. ಬಹುಶ: ನಮಗರಿವಿಲ್ಲದೆಯೇ "ರೈನ್ ಗೇಜ್" ಒಂದು ವಿನ್ಯಾಸಗೊಂಡಿತ್ತು!!! ಆದರೆ ನೀರು ಒಮ್ಮೆಯೂ ದಂಡೆಯ ತುದಿಯವರೆಗೂ ಬರಲೇ ಇಲ್ಲ.

ಕಾಲಾನಂತರದಲ್ಲಿ, ನನ್ನ ತಂಗಿಯನ್ನು ಶಾಲೆಗೆ ಕರೊದೊಯ್ಯುವ ಜವಾಬ್ದಾರಿ ನನ್ನದಾಯಿತು. ಅದೊಂದು ವಿಶೇಷ ಹಾಗೂ ವಿಚಿತ್ರ ಅನುಭವ. ಅವಳಿಗೆ ರೈನ್ ಕೋಟ್ ಹಾಕಿ ಪೂರ್ತಿ ಪ್ಯಾಕ್ ಮಾಡಿದ್ದರೂ, ನನ್ನ ಛತ್ರಿಯಡಿಯಲ್ಲೇ ಕರೆದೊಯ್ಯಬೇಕಿತ್ತು. ಕಾರಣ, ಅವಳ ರೈನ್ ಕೋಟ್ ಒದ್ದೆಯಾಗಬಾರದು!!! ಮತ್ತೆ ದಾರಿಯುದ್ದಕ್ಕೂ ಒಂದೇ ಪ್ರಶ್ನೆ "ಸಂಜೆ ಬೇಗ ಬರ್ತೀಯ? ಎಷ್ಟೊತ್ತಿಗೆ ಬರ್ತೀಯ ಕರ್ಕೊಂಡು ಹೋಗೊಕೆ?". ನಾನಾಗ ಹೈಸ್ಕೂಲ್. ನಾನೋದಿದ ಪ್ರಾಥಮಿಕ ಶಾಲೆಗೆ ನನ್ನ ತಂಗಿ ಹೋಗ್ತಾ ಇದ್ದದ್ದು. ಬೆಳಿಗ್ಗೆ ನಾನು ಶಾಲೆಗೆ ಹೋಗುವಾಗ ಅವಳನ್ನೂ ಜೊತೆಗೆ ಕರೆದುಕೊಂಡು ಹೋಗ್ತಾ ಇದ್ದೆ. ಸಂಜೆ ಬರುವಾಗ ಜೊತೆಯಲ್ಲೇ ಕರೆದುಕೊಂಡು ಬರುತ್ತಾ ಇದ್ದೆ. ಸಾಯಂಕಾಲ ನಾನು ಅವಳ ತರಗತಿಯ ಬಳಿ ಹೋಗುವುದೇ ತಡ, ಅದೆಲ್ಲಿರುತ್ತಿದ್ದಳೊ, ಅದಾವ ಮಾಯದಲ್ಲಿ ನನ್ನ ನೋಡಿರುತ್ತಿದ್ದಳೋ ತಿಳಿಯುತ್ತಿರಲಿಲ್ಲ; ತಕ್ಷಣ ಬಾಗಿಲಲ್ಲಿ ಹಾಜರಾಗುತಿದ್ದಳು. ಟೀಚರ್ ಸಹ, "ಅನುಷ, ನಿನ್ನನ್ನು ಕರೆಯೊದೇ ಬೇಡ" ಅನ್ನುತ್ತಿದ್ದರು.

ಅಬ್ಬಾ! ಆ ಶಾಲೆಯ ದಿನಗಳೇ!!! ಪಠ್ಯಪುಸ್ತಕಗಳಿಗಿಂತಲೂ ಪಠ್ಯೇತರ ಚಟುವಟಿಕೆಗಳಲ್ಲೇ ಆಸಕ್ತಿ. ಆವೇನು ಆಟಗಳು; ಲಗೋರಿ, ಮೈಸೂರ್ ಗೋಲ್, ಕುಂಟಬಿಲ್ಲೆ, ಖೊ ಖೊ, ಕಬಡ್ಡಿ, ವೊಲಿಬಾಲ್, ಬ್ಯಾಡ್ಮಿಂಟನ್, ತರಾವರಿ ನೆಗೆತಗಳು, ಎಸೆತಗಳು, ಓಟಗಳು ಒಂದೇ ಎರಡೇ? ಪ್ರಬಂಧ, ಚರ್ಚೆ, ರಸಪ್ರಶ್ನೆ, ಗಾಯನ, ನೃತ್ಯ, ನಾಟಕ, ಮಾದರಿ ತಯಾರಿಕೆ, ತೋಟಗಾರಿಕೆ, ಚಿತ್ರಕಲೆ, ಆಶುಭಾಷಣ, ಗೈಡ್ಸ್ ಇವುಗಳಿಗೇನು ಲೆಖ್ಖವೇ? ಆಡದ ಆಟಗಳಿಲ್ಲ, ಭಾಗವಹಿಸದ ಚಟುವಟಿಕೆಗಳಿಲ್ಲ. ಚಾತಕ ಪಕ್ಷಿಗಳಂತೆ ಮಳೆಗಾಲ ಮುಗಿಯುವುದನ್ನೇ ಕಾಯುತಿದ್ದೆವು. ಸ್ವಲ್ಪ ಬಿಸಿಲು ಬಂದರೂ ಅನ್ನುವುದಕ್ಕಿಂತ, ಸ್ವಲ್ಪ ಮಳೆ ನಿಂತರೂ ಎನ್ನಬಹುದು. ಬೇಗ ಬೇಗ ಊಟ ಮುಗಿಸಿ ಆಟ. ಯಾವಾಗ ಫ್ರೀ ಪಿರಿಯಡ್ ಸಿಕ್ಕಿದರೂ ಪಿ‌ಇ ಟೀಚರ್ ಹತ್ತಿರ ಹೋಗಿ "ಆಟಕ್ಕೆ ಹೋಗ್ತೀವಿ" ಅಂತ ಒಂದೇ ದುಂಬಾಲು. ಗೇಮ್ಸ್ ಪಿರಿಯಡ್ ನಲ್ಲಂತೂ ಕೇಳೊದೇ ಬೇಡ. ಸುರೆ ಕುಡಿಸಿದ ಕಪಿಗಳಂತೆ ಮೈದಾನಕ್ಕೆ ಧಾಳಿ. ಎಷ್ಟೊಂದು ಆಟಗಳು, ಎಷ್ಟೊಂದು ಜಾಗ!!! ಎಷ್ಟಾಡಿದರೂ ದಣಿವಾಗದು!!! ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಅಭಿವೃಧ್ಧಿಗಾಗಿ ಶ್ರಮಿಸಿದ, ಶ್ರಮಿಸುತ್ತಿರುವ ಅಂತದೊಂದು ವಿದ್ಯಾಸಂಸ್ಥೆಗೆ ಹಾಗೂ ಅದರ ಸಮಸ್ತ ಶಿಕ್ಷಕ ವೃಂದಕ್ಕೆ ನನ್ನ ಅನಂತಾನಂತ ಧನ್ಯವಾದಗಳು.

ಎಲ್ಲೋ ಮನದ ಮೂಲೆಯಲ್ಲೊಂದು ಕೊರಗು ಕಾಣಿಸಿತು. ಈಗಿನ ನಗರದವರಿಗೆಲ್ಲಿದೆ ಈ ಸೌಭಾಗ್ಯ?? ಎಷ್ಟೊಂದು ಶಾಲೆಗಳಲ್ಲಿ ಆಟದ ಮೈದಾನವೇ ಇಲ್ಲ. ಗೇಮ್ಸ್ ಪಿರಿಯಡ್ ಗಳೂ ಇಲ್ಲ. ಎಷ್ಟೊಂದು ಆಟಗಳ ಹೆಸರೇ ತಿಳಿದಿಲ್ಲ. ಮರಕ್ಕೂ ಗಿಡಕ್ಕೂ ವ್ಯತ್ಯಾಸವೇ ತಿಳಿದಿರುವುದಿಲ್ಲ. ಪುಸ್ತಕದ ಹುಳುಗಳಾಗಲು ಸಾಮಾನ್ಯ ಜ್ಞಾನವೆಲ್ಲೋ ಕಳೆದು ಹೋಗುತ್ತಿದೆಯೆ? ಹಾಗೆಂದನಿಸುತ್ತದೆ. ನಾವಾದರೊ ದೊಡ್ಡವರಾಗುತ್ತ, ಪ್ರಗತಿಯ ಹೆಸರಿನಲ್ಲೊ, ಪ್ರತಿಷ್ಠೆಯ ಸೋಗಿನಲ್ಲೋ ಕೇವಲ ಟಿವಿ ಗೋ, ಕಂಪ್ಯೂಟರ್ ಗೋ ಅ೦ಟಿಕೊ೦ಡೆವೇ? ಏನನ್ನೊ ಬೆಲೆಬಾಳುವಂತಹುದನ್ನು ಕಳೆದುಕೊಂಡಂತಹ ಭಾವನೆ ಮೂಡಿತು.

ಅಷ್ಟೆಲ್ಲ ಆಡಿ ಮನೆಗೆ ಹೋಗುವಷ್ಟರಲ್ಲಿ, ಅಮ್ಮ ತಿಂಡಿ ಹಾಲು ಸಿದ್ಧವಿರಿಸಿರುತ್ತಿದ್ದರು. ಸ್ವಾಹ ಮಾಡಿ ಓದುವ ಪ್ರಕ್ರಿಯೆ ಶುರು. ತಂದೆ ಬರುವಷ್ಟರಲ್ಲಿ ಹೋಮ್ ವರ್ಕ್ ಮುಗಿಸಿರಬೇಕು. ಅವರು ಬಂದು ತಯಾರಾದ ಬಳಿಕ ಪಾಠ ಶುರು. ಅರ್ಥವಾಗಿಲ್ಲ ಅಂದರೆ ಎಷ್ಟು ಬಾರಿಯಾದರೂ ಹೇಳಿಕೊಡುತ್ತಿದ್ದರು. ಆದರೆ "ಅರ್ಥವಾಯಿತು" ಎಂದು, ಕೇಳಿದ ಪ್ರಶ್ನೆಗಳಿಗೆ ಸಮಂಜಸವಾದ ಉತ್ತರ ಕೊಡದೆ ಹೋದರೆ, ಉದಾಸೀನದ ಉತ್ತರವನ್ನೇನಾದರು ಕೊಟ್ಟರೆ, ಮುಗಿಯಿತು ಕಥೆ. ತಿಂದ ಒದೆಗಳು ಈಗಲೂ ಜ್ಞಾಪಕದಲ್ಲಿವೆ!!! "ಓದುವಾಗ ಓದು, ಆಡುವಾಗ ಆಡು" ತಂದೆಯ ಸಿದ್ಧಾಂತ. ಬಹುಶ: ತಂದೆ ಚಿಕ್ಕಂದಿನಿಂದಲೂ ಓದಿನಲ್ಲಿ ಆ ತರಹದ ಸೀರಿಯಸ್ನೆಸ್ ತಂದಿರಲಿಲ್ಲವಾಗಿದ್ದರೆ, ಸ್ವತಂತ್ರವಾಗಿ, ಸಮರ್ಥವಾಗಿ, ಸ್ವಾವಲಂಬಿಯಾಗಿ ಓದುವ ಶಕ್ತಿ ಬರುತ್ತಿತ್ತೇ ಎಂಬುದು ಈಗಲೂ ಪ್ರಶ್ನೆ.

ನಂತರ ಎಲ್ಲರೂ ಕುಳಿತು ಊಟ. ಮಳೆಗಾಲ ಮುಗಿದಿದ್ದರೆ, ಚಂದ್ರನ ಸಾಕ್ಷಿಯಾಗಿ, ಮನೆಯಂಗಳದಲ್ಲಿ, ನೆರೆಯವರೊಡಗೂಡಿ ಬೆಳದಿಂಗಳೂಟ. ಬರಿದೇ ಅನ್ನ ಸಾರು ಊಟವೇ ಆದರೂ, ಎಲ್ಲರೂ ಕೂಡಿ ಹಂಚಿಕೊಂಡು ತಿನ್ನುವಾಗ ... ಅದನ್ನನುಭವಿಸಿಯೇ ತೀರಬೇಕು. ಅದೊಂದು ರಸಕವಳವೇ ಸರಿ.

ಉರುಳುತ್ತಿದ್ದ ಕಾಲಚಕ್ರದೊಂದಿಗೆ, ತಂದೆಯವರ ವರ್ಗಾವಣೆಯ ಫಲವಾಗಿ ನಗರವೊ೦ದಕ್ಕೆ ಬಂದಾಗ, ಹೊಸ ಅನುಭವ. ಹೊಸ ಜಾಗ, ಹೊಸ ಶಾಲೆ, ಹೊಸ ಜನ. ಹೊಸದರಲ್ಲಿ ಏನೋ ಕಸಿವಿಸಿ, ಮುಜುಗರ. ಹಳ್ಳಿಯಿಂದ ಬಂದವಳೆಂಬ ಅಸಡ್ಡೆಯೋ, ಅಥವಾ ಅಲ್ಲಿಯವರು ಬೆರೆಯುತ್ತಿದ್ದುದೇ ಹಾಗೆಯೋ ಗೊತ್ತಿಲ್ಲ. ಜನ ಯಾವುದೋ ಮುಸುಕು ಹಾಕಿಕೊಂಡು ಬದುಕುತ್ತಿದ್ದಾರೇನೊ ಎಂದು ಭಾಸವಾಯಿತು. ಆಟ-ಪಾಠ-ಪಠ್ಯೇತರ ಚಟುವಟಿಕೆಗಳೆಲ್ಲದರಲ್ಲೂ ಮುಂದಿರುತ್ತಿದ್ದ ನನಗೆ, ಎಲ್ಲೋ ಕೂಡಿಹಾಕಿದ ಅನುಭವ. ಆಡುವ ಆಟವನ್ನು ವರ್ಷದ ಶುರುವಿನಲ್ಲೇ ಹೇಳಿ, ವರ್ಷ ಪೂರ್ತಿ ಅದೇ ಆಟವನ್ನಾಡಬೇಕು. ಲೈಬ್ರರಿ ಪಿರಿಯಡ್ ನಲ್ಲಿ ಕನ್ನಡ ಪುಸ್ತಕ ಓದಿದರೆ "ಕನ್ನಡ ಪುಸ್ತಕ??" ಎಂಬಂತೊಂದು ನೋಟ. ಅದೇಕೆ ಎಂಬುದು ಇಂದಿಗೂ ಪ್ರಶ್ನೆಯಾಗಿ ಉಳಿದಿದೆ. ಪಠ್ಯೇತರ ಚಟುವಟಿಕೆಗಳೂ ಸಹ ಕೆಲವೇ ಬಲ್ಲಿದವರಿಗೆ ತಿಳಿದಿರುತ್ತಿತ್ತು. ಆದರೆ ಹಠಕ್ಕಾಗಿ ಬರೆದ ಕನ್ನಡ ಪ್ರಬಂಧವೊಂದಕ್ಕೆ ರಾಜ್ಯ ಪ್ರಶಸ್ತಿ ಬಂದಾಗ ಚಿತ್ರಣ ಬದಲಾಯಿತೆನ್ನಿ. ನಿಜವಾದ ಚಿತ್ರಣವಲ್ಲ, ನನ್ನ ಪಾಲಿನದು ಮಾತ್ರ; ಅಂದರೆ ನಾನೂ ಆ ಬಲ್ಲಿದವರಲ್ಲೊಬ್ಬಳಾದೆ ಅಷ್ಟೆ!!! ಆದರೂ ಎಲ್ಲೋ ನನ್ನ ಆ ಮೊದಲಿನ ಫಾರ್ಮ್ ಕಳೆದು ಹೋದ ಅನುಭವ.

ನಂತರದ ಆ ಎರಡು ವರ್ಷಗಳು (೧ ಮತ್ತು ೨ ನೇ ಪಿ.ಯು.ಸಿ) ಹೇಗೆ ಓಡಿದವೋ ತಿಳಿಯಲಿಲ್ಲ. ಶುರು ಎನ್ನುವುದರೊಳಗಾಗಿ ಕೊನೆಯಾಗಿದ್ದವು. ಜೀವನದ "ಕೋಮಾ" ಸ್ಥಿತಿ ಅನಿಸುತ್ತದೆ. ಇಂಜಿನಿಯರಿಂಗ್ ಸಹ ಹಿಡಿಯುವುದರೊಳಗಾಗಿ ಜಾರಿ ಹೋಗಿತ್ತು. ಬರೀ ಇಂಟರ್ನಲ್ಸ್ - ಲ್ಯಾಬ್ - ಎಕ್ಸ್ಟರ್ನಲ್ಸ್ ಗಳಲ್ಲಿಯೇ ಮುಗಿದು ಹೋಯಿತು.

ಕಾಲಗರ್ಭದಲ್ಲಡಗಿದ್ದ ಈ ನೆನಪುಗಳು, ಮನ:ದ ಸ್ಮೃತಿಪಟಲದಲ್ಲಿ ಹೀಗೆ ಹಾದು ಹೋಗುತ್ತಿರುವಾಗ, ಅಬ್ಬಾ! ಕಾಲವೇ! ನಿನ್ನ ಹಿಡಿದವರುಂಟೇ ಎಂದೆನಿಸಿ ಎಚ್ಚರವಾಯಿತು. ಆಗ ಯಾವುದೋ ರೇಡಿಯೊ ವಾಹಿನಿಯಲ್ಲಿ ಬರುತ್ತಿದ್ದ ಹಳೇ ಹಿಂದಿ ಹಾಡಿನತ್ತ ಗಮನ ಹೋಯಿತು. ಹಾಡಿನ ಸಾಹಿತ್ಯ ಜ್ಞಾಪಕವಿಲ್ಲ. ಆದರೆ ಅದು ತಂದೆ ಮಗಳನ್ನು ಮದುವೆ ಮಾಡಿ ಕಳುಹಿಸುವ ಸಂದರ್ಭದಲ್ಲಿ ಹಾಡುವ ಹಾಡು. ಮಗಳ ಬಾಲ್ಯದ ನೆನಪುಗಳ ಸರಮಾಲೆ. ಏಕೋ ನನಗರಿವಿಲ್ಲದೆಯೇ ಕಣ್ಣಿನಿಂದೆರಡು ಹನಿ ಕೆಳಗುದುರಿತು. ಕೈ ಮೇಲೇನೋ ಬೆಚ್ಚಗಾದಾಗ ಅರಿವಿಗೆ ಬಂತು. ನೆನೆದದ್ದು ಒಳ್ಳೆಯದೇ ಆಯಿತು, ಕಣ್ಣೀರೆಂದು ಗೊತ್ತಾಗುವುದಿಲ್ಲ ಎಂಬ ಸಮಾಧಾನದಲ್ಲಿ ಪಕ್ಕಕ್ಕೆ ತಿರುಗಿದೆ. ಅವರು ಯಾವಾಗಲೋ ಇಳಿದು ಹೋಗಿದ್ದರು. ಆಗಲೇ ಸಾಕಷ್ಟು ನೆಂದಿದ್ದ ದೇಹಕ್ಕೆ ಆ ಎರಡು ಹನಿಗಳೇನು ಭಾರವಾಗಲಿಲ್ಲ.............